Slide
Slide
Slide
previous arrow
next arrow

ಪಹಣಿಗಳ ಆಧಾರ್ ಸೀಡಿಂಗ್ ಶೇ.100 ಪ್ರಗತಿ ಸಾಧಿಸಿ: ಪೊಮ್ಮಲ ಸುನೀಲ್ ಕುಮಾರ್

300x250 AD

ಕಾರವಾರ: ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವುದು ಸರ್ಕಾರದ ಅತ್ಯಂತ ಪ್ರಮುಖ ಯೋಜನೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಯೋಜನೆಯಡಿ ಇದುವರೆಗೆ ಶೇ.75 ರಷ್ಟು ಪ್ರಗತಿಯಾಗಿದ್ದು , ಈ ಯೋಜನೆಯಲ್ಲಿ ಶೇ.100 ಪ್ರಗತಿ ಸಾಧಿಸಲು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹೆಚ್ಚಿನ ಗಮನಹರಿಸುವಂತೆ ರಾಜ್ಯದ ಕಂದಾಯ ಇಲಾಖೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಸೂಚಿಸಿದರು.

ಅವರು ಮಂಗಳವಾರ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ 21,24,728 ಆರ್.ಟಿ.ಸಿ ಗಳಿಗೆ ಆಧಾರ್ ಜೋಡಣೆ ಕಾರ್ಯ ಮಾಡಬೇಕಿದ್ದು, ಇದುವರೆಗೆ 11,69,620 ಆರ್.ಟಿ.ಸಿ ಗಳಿಗೆ ಆಧಾರ್ ನೋಂದಣಿ ಮಾಡಿ ಶೇ.75 ರಷ್ಟು ಪ್ರಗತಿ ಸಾಧಿಸಲಾಗಿದೆ. ಬಾಕಿ ಇರುವ ಪಹಣಿದಾರರನ್ನು ಸಂಪರ್ಕಿಸಿ ಶೀಘ್ರದಲ್ಲಿ ಇದನ್ನು ಪೂರ್ಣಗೊಳಿಸುವಂತೆ ತಿಳಿಸಿದ ಅವರು ಮೂಲ ಪಹಣಿದಾರರು ಮರಣ ಹೊಂದಿದ್ದರೆ ಅವರ ವಾರಿಸುದಾರರಿಗೆ ಮಾಲೀಕತ್ವವನ್ನು ವರ್ಗಾಯಿಸುವ ಕುರಿತಂತೆ ಕ್ರಮ ಕೈಗೊಳ್ಳಿ, ಮೃತರ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೌತಿ ಖಾತೆ ಆಂದೋಲನ ಕಾರ್ಯಕ್ರಮಗಳನ್ನು ಎಲ್ಲಾ ತಾಲೂಕುಗಳಲ್ಲಿ ಆಯೋಜಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳನ್ನು ಗುರುತಿಸಿ ಸಂರಕ್ಷಿಸುವ ಲ್ಯಾಂಡ್ ಬೀಟ್ ಯೋಜನೆಯಡಿ, ಎಲ್ಲಾ ಸರ್ಕಾರಿ ಜಮೀನುಗಳನ್ನು ಸರ್ವೇ ಮಾಡಿ, ಅವುಗಳನ್ನು ಗುರುತು ಮಾಡುವ ಪ್ರಕ್ರಿಯೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಮತ್ತು ತಹಸೀಲ್ದಾರ್‌ಗಳು ಆದ್ಯತೆಯಲ್ಲಿ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಸಂಪೂರ್ಣವಾಗಿ ಬಳಕೆಮಾಡುವ ಮೂಲಕ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣದ ಮೂಲಕವೇ ವಿಲೇವಾರಿ ಮಾಡುವ ಮೂಲಕ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ಇರುವಂತೆ ನೋಡಿಕೊಳ್ಳಬೇಕು ಹಾಗೂ ಸಾರ್ವಜನಿಕರ ಅರ್ಜಿಗಳನ್ನು ನಿಗಧಿತ ಅವಧಿಯೊಳಗೇ ವಿಲೇವಾರಿ ಮಾಡುವಂತೆ ಸೂಚಿಸಿದರು.
ಕಂದಾಯ ಇಲಾಖೆಯ ಸುಗಮ ಕಾರ್ಯ ವ್ಯವಸ್ಥೆಗಾಗಿ ರಚಿಸಲಾಗಿರುವ ವಿವಿಧ ತಂತ್ರಾಂಶಗಳನ್ನು ಸಮರ್ಪಕ ರೀತಿಯಲ್ಲಿ ಸಂಪೂರ್ಣವಾಗಿ ಬಳಕೆ ಮಾಡುವಂತೆ ತಿಳಿಸಿದ ಅವರು, ತಂತ್ರಾಂಶ ಬಳಕೆಯಲ್ಲಿ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಕೇಂದ್ರದಲ್ಲಿರುವ ಸಂಬಂಧಪಟ್ಟ ತಾಂತ್ರಿಕ ಸಮಾಲೋಚಕರ ಮೂಲಕ ಬಗೆಹರಿಸಿಕೊಳ್ಳುವಂತೆ ಮತ್ತು ಜಿಲ್ಲೆಯಲ್ಲಿನ ಭೂ ದಾಖಲೆಗಳ ವಿಸ್ತೀರ್ಣ ಮತ್ತಿತರ ವಿಷಯಗಳ ಕುರಿತಂತೆ ಗೊಂದಲಗಳಿದ್ದಲ್ಲಿ ಜಿಲ್ಲಾ ಭೂ ದಾಖಲೆಗಳ ಉಪನಿರ್ದೇಶಕರ ಮೂಲಕ ಸ್ಥಳ ಪರಿಶೀಲನೆಗಳನ್ನು ನಡೆಸಿ, ಸೂಕ್ತ ಗುರುತುಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ರಾಜ್ಯದಲ್ಲಿನ ಕಂದಾಯ ಇಲಾಖೆಯ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುವ ಕಾರ್ಯದ ಅಂಗವಾಗಿ ಪೈಲಟ್ ತಾಲೂಕಾಗಿ ಆಯ್ಕೆ ಮಾಡಿರುವ ಶಿರಸಿ ತಾಲೂಕಿಗೆ ಸಂಬಂಧಪಟ್ಟ ಎಲ್ಲಾ ಕಂದಾಯ ದಾಖಲೆಗಳು ಮತ್ತು ಕಡತಗಳನ್ನು ಸಂಪೂರ್ಣವಾಗಿ ಸ್ಕ್ಯಾನ್ ಮಾಡುವ ಕಾರ್ಯವನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಬೆಳಗಾವಿ ವಿಭಾಗದ ಭೂ ದಾಖಲೆಗಳ ಜಂಟಿ ನಿರ್ದೇಶಕಿ ನಜ್ಮಾ ಎಂ ಪೀರಜಾದೆ , ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್‌ಗಳು, ಭೂ ದಾಖಲೆಗಳ ಸಹಾಯಕ ನಿರ್ದೇಶಕರುಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top