ಕಾರವಾರ: ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಮೋದಿತ ಗುರಿಯನ್ನು ಸಾಧಿಸಲು ಕ್ರಮವಹಿಸಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಹೇಳಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮನರೇಗಾ ಯೋಜನೆಯಡಿ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಅತಿ ಹೆಚ್ಚು ಕೂಲಿಕಾರರು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಅನುಷ್ಠ್ಠಾನ ಇಲಾಖೆಗಳು ಉತ್ತಮ ಸಹಕಾರ ನೀಡಬೇಕು. ಪ್ರಸ್ತುತ ಕೂಲಿ ಮೊತ್ತ ಸಹ 349 ರೂ. ನಿಂದ 370 ರೂ. ಹೆಚ್ಚಳವಾಗಿದೆ. ಜೊತೆಗೆ ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಕಾರಣ ಕೂಲಿಕಾರರ ಆರೋಗ್ಯ ಹಿತದೃಷ್ಟಿಯಿಂದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೆಲಸದ ಪ್ರಮಾಣದಲ್ಲಿ 30% ರಿಯಾಯಿತಿ ಸಹ ಮಾಡಲಾಗಿದೆ. ಆದ್ದರಿಂದ ಕೂಲಿಕಾರರು ಬೇಸಿಗೆಯಲ್ಲಿ ವಲಸೆ ಹೋಗದೆ ಸ್ವಗ್ರಾಮದಲ್ಲಿಯೇ ಮನರೇಗಾ ಯೋಜನೆಯಡಿ ಉದ್ಯೋಗ ಪಡೆಯುವಂತೆ ಅವಕಾಶ ನೀಡಬೇಕು ಎಂದು ಹೇಳಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆ ಸಂಬAಧಿಸಿದAತೆ ಕಾಮಗಾರಿ ಪೂರ್ಣಗೊಳಿಸುವಿಕೆ, ಆದ್ಯತಾ ಕಾಮಗಾರಿಗಳು, ಸಾಮಾಜಿಕ ಲೆಕ್ಕ ಪರಿಶೋಧನೆ, ಬೂದು ನೀರು ನಿರ್ವಹಣೆ ಕಾಮಗಾರಿ ಸೇರಿದಂತೆ ವಿವಿಧ ಅಂಶಗಳ ಪ್ರಗತಿ ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ ಅವರು, ಭವಿಷ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ಭೌಗೋಳಿಕ ವರದಿ ಅನುಸಾರ ಅವಶ್ಯಕತೆ ಇರುವಲ್ಲಿ ಕೊಳವೆ ಬಾವಿ ಮರುಪೂರಣ ಘಟಕ ನಿರ್ಮಿಸಬೇಕು. ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಮುತುವರ್ಜಿ ವಹಿಸಬೇಕು ಎಂದರು.
ಸಕಾಲ, ಕೂಸಿನ ಮನೆ, ನಲ್ ಜಲ್, 15ನೇ ಹಣಕಾಸು, ಇ ಹಾಜರಾತಿ, ಸಂಜೀವಿನಿ ಎನ್ಆರ್ಎಲ್ಎಮ್, ಸ್ವಚ್ಛ ಭಾರತ ಮಿಷನ್, ವಸತಿ, ಹಣಕಾಸು, ಜಲ್ ಜೀವನ ಮಿಷÀನ್ ಸೇರಿದಂತೆ ಹಲವು ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.