ಸಿದ್ದಾಪುರ: ಕೆಲವು ತಾಂತ್ರಿಕ ತೊಂದರೆಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ದೊರಕದೇ ಇರುವುದು ಗಮನಕ್ಕೆ ಬಂದಿದೆ. ತನ್ನಿಮಿತ್ತವಾಗಿ ತಾಲೂಕಿನ ಎಲ್ಲ ಗ್ರಾಪಂಗಳಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆ ಕುರಿತು ಚರ್ಚಿಸಿ ಪರಿಹರಿಸಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿದೆ ಎಂದರು.
ಶಕ್ತಿ ಯೋಜನೆಯ ಕುರಿತಾಗಿ ಸಾರಿಗೆ ಇಲಾಖೆ ಅಧಿಕಾರಿ ಎಂ.ಎನ್.ನಾಯ್ಕ ಮಾತನಾಡಿ, ತಾಲೂಕಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆಯಾಗಬೇಕು. ನಾಣಿಕಟ್ಟಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಸಾಗರ ಮಾರ್ಗದ ಅರೆಂದೂರು, ಕವಂಚೂರು ಮಾರ್ಗದಲ್ಲಿ, ಸರ್ಕಾರಿ ಪ್ರಥಮ ದರ್ಜೆ, ಅವರಗುಪ್ಪದ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ಸಾರಿಗೆ ವ್ಯವಸ್ಥೆ ಆಗಬೇಕೆಂದರು.
ಗೃಹಜ್ಯೊತಿ ಯೋಜನೆ ಕುರಿತಾಹಿ ತಾಲೂಕಿನಲ್ಲಿ 1207 ಫಲಾನುಭವಿಗಳು ಇನ್ನೂ ಸೇರ್ಪಡೆ ಆಗಬೇಕಿದೆ ಎಂದು ಹೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು. ತಾಲೂಕಿನಾಧ್ಯಂತ ವಿದ್ಯುತ್ ಸಮಸ್ಯೆ ಇದೆ. ಕಳೆದ ಐದಾರು ದಿನದಿಂದ ಕೆಲವು ಗ್ರಾಮಗಳಲ್ಲಿ ವಿದ್ಯುತ್ ಇಲ್ಲದಂತಾಗಿದೆ ಕೂಡಲೇ ವಿದ್ಯುತ್ ವ್ಯವಸ್ಥೆ ಸರಿಪಡಿಸುವಂತೆ ಸದಸ್ಯರು ಆಗ್ರಹಿಸಿದರು.
ಗೃಹಲಕ್ಷ್ಮಿ ಯೋಜನೆಯಲ್ಲಿ ಶೇ.98ರಷ್ಟು ಪ್ರಗತಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಕೆಲವೆಡೆ ಒಂದು ತಿಂಗಳು ಮಾತ್ರ ಬಾಕಿ ಇದೆ. ಇನ್ನು ಕೆಲವರಿಗೆ ಮೂರು ತಿಂಗಳು ಹಣ ಜಮಾ ಆಗಬೇಕಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ ಹೇಳಿದರು.
ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚು ಆಗುತ್ತಿರುವುದರಿಂದ ಮಲೆನಾಡಿನ ತಾಲೂಕುಗಳಿಗೆ ಹೆಚ್ಚು ಸೀಮೆ ಎಣ್ಣೆ ವಿತರಿಸಬೇಕು. ವಿದ್ಯುತ್ ಇಲ್ಲದಿರುವುದರಿಂದ ಶಾಲಾ-ಕಾಲೇಜು ಮಕ್ಕಳಿಗೆ ತೊಂದರೆ ಉಂಟಾಗುತ್ತಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಹಾಗೂ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯವರು ಆಗ್ರಹಿಸಿದ್ದು, ಈ ಕುರಿತು ಸಂಬಂಧಪಟ್ಟ ಇಲಾಖೆಯವರಿಗೆ ಮಾಹಿತಿ ನೀಡಲಾಗವುದು ಎಂದು ಅಧ್ಯಕ್ಷ ಕೆ.ಜಿ.ನಾಗರಾಜ ಹೇಳಿದರು. ತಾಪಂ ಇಒ ದೇವರಾಜ ಹಿತ್ತಲಕೊಪ್ಪ ಉಪಸ್ಥಿತರಿದ್ದರು.