ಯಲ್ಲಾಪುರ: ಡಿಜಿಟಲ್ ತಂತ್ರಜ್ಞಾನ ಬಳಸಿಕೊಂಡು ಮೋಸ ಮಾಡುವವರ ಸಂಖ್ಯೆ ಈಚೆಗೆ ಹೆಚ್ಚಾಗಿದ್ದು ಜನ ಜಾಗೃತರಾಗಿರಬೇಕು ಎಂದು ಯಲ್ಲಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಿಯಾಂಕ ಗೌಡ ಹೇಳಿದರು.
ಅವರು ವಿಶ್ವದರ್ಶನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸೈಬರ್ ಅಪರಾಧ ತಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈಚೆಗೆ ಆನ್ ಲೈನ್ ಮೂಲಕ ವಂಚಿಸುವವರ ಸಂಖ್ಯೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಪಡಿಸಿಕೊಂಡು ಕೆಲವರು ವಂಚನೆ ಮಾಡುತ್ತಿದ್ದಾರೆ. ಈ ಕೃತ್ಯ ಎಸೆಗುವವರನ್ನು ಪತ್ತೆ ಮಾಡಲು ಪೊಲೀಸ್ ಇಲಾಖೆ ಶ್ರಮಿಸುತ್ತಿದೆ. ಆನ್ ಲೈನ್ ಮೂಲಕ ಹಣಕ್ಕೆ ಬೇಡಿಕೆ ಇಡುವವರ ಕುರಿತು ಜನ ಎಚ್ಚರದಿಂದ ಇರಬೇಕು. ಆಮೀಷಗಳಿಗೆ ಬಲಿಯಾಗಿ ಹಣ ಕಳೆದುಕೊಳ್ಳಬಾರದು ಎಂದು ಅವರು ಹೇಳಿದರು. ಅಪರಿಚಿತರು, ಅನುಮಾನಾಸ್ಪದ ವ್ಯಕ್ತಿ ಹಾಗೂ ಅಪರಾಧಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಇದ್ದಲ್ಲಿ ಮಕ್ಕಳು ಧೈರ್ಯದಿಂದ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ವಿಶ್ವದರ್ಶನ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯ ಗಣೇಶ ಭಟ್ಟ ಮಾತನಾಡಿ, ಮಕ್ಕಳಿಗೆ ಕಾನೂನು ಅರಿವು ಮೂಡಿಸುತ್ತಿರುವ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ ಎಂದರು. ಶಿಕ್ಷಕಿ ಕವಿತಾ ಹೆಬ್ಬಾರ್ ನಿರ್ವಹಿಸಿದರು.