ಕಾರವಾರ: ನವದೆಹಲಿಯಲ್ಲಿನ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಭಾರತ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಶತಮಾನೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿಪ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾದರು.
ರಾಷ್ಟ್ರಪತಿ ರಾಮನಾಥ ಕೋವಿಂದರವರು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಶತಮಾನೋತ್ಸವದ ಅಂಗವಾಗಿ ಹೊರ ತಂದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿಯ 100 ವರ್ಷಗಳ ಸಾಧನೆ ಪ್ರತಿಬಿಂಬಿಸುವ ಪ್ರದರ್ಶನವನ್ನು ಉದ್ಘಾಟಿಸಿದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕ ಸಭಾಧ್ಯಕ್ಷ ಓಂ ಬಿರ್ಲಾ, ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಅಧಿರಂಜರ್ ಚೌಧರಿ, ರಾಜ್ಯ ಸಭೆಯ ಉಪಸಭಾಪತಿ ಹರಿವಂಶ ನಾರಾಯಣ ಸಿಂಗ್ ಮತ್ತಿತರರು ಪಾಲ್ಗೊಂಡಿದ್ದರು.
ಉದ್ಘಾಟನಾ ಸಮಾರಂಭದ ಬಳಿಕ ನಡೆದ ಗೋಷ್ಠಿಯಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರ್ವಹಣೆ, ಸವಾಲುಗಳು, ಮುನ್ನೋಟ ಸೇರಿದಂತೆ ವಿವಿಧ ವಿಷಯಗಳ ಕುರಿತು ತಜ್ಞರು ವಿಷಯ ಮಂಡಿಸಿದರು. ಈ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಸಭಾಪತಿ ಹೊರಟ್ಟಿ ಹಾಗೂ ವಿಧಾನ ಸಭೆಯ ಸಭಾಧ್ಯಕ್ಷ ಹೆಗಡೆ ಕಾಗೇರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಭಿವೃದ್ಧಿ ಕುರಿತು ನಡೆಯುತ್ತಿರುವ ವಿಚಾರ ಗೋಷ್ಠಿಯಲ್ಲಿ ಹೊರಟ್ಟಿ ಕಾಗೇರಿ ತಮ್ಮ ವಿಚಾರ ಮಂಡಿಸಲಿದ್ದಾರೆ.