ಅಂಕೋಲಾ: ಮಹತ್ವಾಕಾಂಕ್ಷೆಯ ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆಯ ಅನುಷ್ಠಾನದ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಎಲ್ಲ ಸಹಕಾರ- ಉಪಕ್ರಮಗಳನ್ನು ತೆಗೆದುಕೊಳ್ಳಲಿದೆ. ಯೋಜನೆ ಜಾರಿಗೆ ಎಲ್ಲ ಪ್ರಯತ್ನ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಶುಕ್ರವಾರ ಹುಬ್ಬಳ್ಳಿ-ಅಂಕೋಲಾ ರೈಲ್ವೇ ಹೋರಾಟ ಕ್ರಿಯಾ ಸಮಿತಿಯ ಪರವಾಗಿ ಕಾರ್ಯದರ್ಶಿ ವಿಠ್ಠಲದಾಸ ಕಾಮತ್ ಭೇಟಿಯಾಗಿ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚರ್ಚಿಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು. ಸಚಿವರಿಗೆ ಮನವಿ ಸಲ್ಲಿಸಿರುವ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಹೋರಾಟ ಕ್ರಿಯಾ ಸಮಿತಿಯು ಪ್ರಸ್ತುತ ರಾಜ್ಯ ವನ್ಯಜೀವಿ ಮಂಡಳಿಯು ಯೋಜನೆಪರ ಒಪ್ಪಿಗೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವ ವಿಚಾರವಾಗಿ ಹೈಕೋರ್ಟ್ ಈಗ ಈ ಯೋಜನೆಯಿಂದ ವನ್ಯ ಜೀವಿಗಳ ಮೇಲಾಗುತ್ತಿರುವ ಸಾಧಕ-ಬಾಧಕದ ಬಗ್ಗೆ ಸತಂತ್ರ ವರದಿ ಸಲ್ಲಿಕೆಗೆ ಕೇಂದ್ರ ವನ್ಯಜೀವಿ ಮಂಡಳಿಗೆ ಸೂಚನೆ ನೀಡಿದೆ. ಹೀಗಾಗಿ ಈಗ ಕೇಂದ್ರ ಸರ್ಕಾರದ ಪಾತ್ರ ಮಹತ್ವದ್ದಾಗಿದ್ದು, ನಮ್ಮ ಜೊತೆ ಹೋರಾಟದಲ್ಲಿ ಸಕ್ರೀಯರಾಗಿದ್ದ ತಾವು ಕೇಂದ್ರ ವನ್ಯಜೀವಿ ಮಂಡಳಿಗೆ ಯೋಜನೆಗೆ ಪೂರಕವಾಗಿ ಇರುವ ಮಾಹಿತಿ ಒದಗಿಸಿ ವರದಿ ಯೋಜನೆಯ ಪರ ಬರುವಂತೆ ಕ್ರಮಕೈಗೊಳ್ಳುವಂತೆ ಮನವಿಯಲ್ಲಿ ವಿನಿಂತಿಸಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಲ್ಹಾದ ಜೋಶಿ ಅವರು ಈ ಪ್ರಕರಣವನ್ನು ನಿತ್ಯ ಅವಲೋಕನ ಮಾಡಲು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆಎಂದರು. ಅಧಿವೇಶನದ ನಂತರದಲ್ಲಿ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಪದಾಧಿಕಾರಿಗಳ ಜೊತೆಗೆ ಈ ಬಗ್ಗೆ ಚರ್ಚೆ ನಡೆಸುವುದಾಗಿ ಮತ್ತು ಇದಕ್ಕೆ ಇರುವ ಅಡೆತಡೆ ನಿವಾರಣೆಗೆ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.ಮಹತ್ವಾಕಾಂಕ್ಷೆ ಯೋಜನೆ ಜಾರಿಗೆ ಬಹುತೇಕರಿಂದ ಒತ್ತಾಯ ಇದ್ದರೂ ಉ.ಕ ಜಿಲ್ಲೆಯ ಕೆಲವರು ಪದೇ ಪದೇ ತಕರಾರು ಎತ್ತುತ್ತಿರುವುದಕ್ಕೆ ಸಚಿವರು ಬೇಸರ ವ್ಯಕ್ತಪಡಿಸಿದರು.