ಹೊನ್ನಾವರ: ಗುಂಡಿಬೈಲ್ ನವಗ್ರಾಮ ಕಾಲೊನಿಯ ಪಕ್ಕದ ಜಾಗವನ್ನು ತಾಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯಿತಿಯಿoದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಆಯ್ಕೆ ಮಾಡಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
44 ನಾಗರಿಕರು ಘಟಕ ನಿರ್ಮಾಣ ವಿರೋಧಿಸಿ ಸಹಿ ಹಾಕಿದ ಪತ್ರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ರವಾನಿಸಿದ್ದಾರೆ.
ಜನವಸತಿ ಪ್ರದೇಶದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಅವೈಜ್ಞಾನಿಕ ಕ್ರಮವಾಗಿದೆ. ಸುತ್ತಲಿನ 40 ಮನೆಗಳಿಗೆ ಇದರಿಂದ ತೊಂದರೆ ಯಾಗಲಿದೆ. ರೋಗ ಹರಡುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ನಾಯ್ಕ, ಎನ್. ಆರ್. ಇ. ಜಿ. ಸಹಾಯಕ ನಿರ್ದೇಶಕ ಕೃಷ್ಣಾನಂದ, ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಘ್ನೇಶ ಹೆಗಡೆ, ಸದಸ್ಯರು ಹಾಗೂ ಪಿಡಿಒ ಗೀತಾ ಹೆಗಡೆ ಬುಧವಾರ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಚರ್ಚಿಸಿದರು.