ಕಾರವಾರ: ರಾಜ್ಯದ ಖಾಸಗಿ ಶಾಲಾ ಕಾಲೇಜಿನವರು ಕಟ್ಟಡ ಹಾಗೂ ಅಗ್ನಿ ಸುರಕ್ಷತೆ ಪ್ರಮಾಣ ಪತ್ರಗಳ್ನು ಸಂಬಂಧಿಸಿದ ಪ್ರಾಧಿಕಾರದಿಂದ ಪಡೆಯಲು ಸಾಕಷ್ಟು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2021-22 ನೇ ಸಾಲಿಗೆ ಸೀಮಿತವಾಗಿ ನವೀಕರಣಕ್ಕಾಗಿ ಪ್ರಮಾಣಪತ್ರಗಳನ್ನು ಸಲ್ಲಿಸುವುದಕ್ಕೆ ವಿನಾಯಿತಿ ನೀಡಲು ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ ಅವರು ಸರ್ಕಾರದ ಕಾರ್ಯದರ್ಶಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಅವರಿಗೆ ನಿರ್ದೇಶನ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಟ್ಟಡ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತೆ ಪ್ರಮಾಣ ಪತ್ರಗಳನ್ನು ಪಡೆಯುವಲ್ಲಿ ಅನುದಾನಿತ, ಅನುದಾನರಹಿತ ಶಾಲಾ ಕಾಲೇಜು ಆಡಳಿತ ಮಂಡಳಿಯವರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಬೆಳಗಾವಿಯಲ್ಲಿ ಜರುಗಿದ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಡಿ.21 ರಂದು ಸಭೆ ಏರ್ಪಡಿಸಲಾಗಿತ್ತು. ಆ ಸಭೆಯಲ್ಲಿ ತೀರ್ಮಾನಿಸಿದಂತೆ ಎಸ್.ಎಸ್.ಎಲ್.ಸಿ ಮಕ್ಕಳ ಪರೀಕ್ಷಾ ಹಿತದೃಷ್ಟಿಯಿಂದ ಹಾಗೂ ಆರ್.ಟಿ.ಇ ಶುಲ್ಕ ಮರುಪಾವತಿಗಾಗಿ ಸಂಬಂಧಪಟ್ಟ ಆಡಳಿತ ಮಂಡಳಿಯಿಂದ ಸುರಕ್ಷತೆಯ ಪ್ರಮಾಣ ಪತ್ರಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸಲ್ಲಿಸುವ ಶರತ್ತಿಗೊಳಪಟ್ಟು ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದುಂಟು.
ಈ ಹಿನ್ನೆಲೆಯಲ್ಲಿ ಎಲ್ಲ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಯವರು ಆತಂಕಕ್ಕೆ ಒಳಗಾಗದೇ ಸಂಬಂಧಪಟ್ಟ ಉಳಿದ ದಾಖಲೆಗಳನ್ನು ಆನ್ಲೈನ್ ಮೂಲಕ ಉಪನಿರ್ದೇಶಕರುಗಳಿಗೆ ಸಲ್ಲಿಸುವಂತೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ವಿನಂತಿಸಿದ್ದಾರೆ. ಇದಲ್ಲದೇ ಈ ಕುರಿತು ಸರ್ಕಾರದ ಕಾರ್ಯದರ್ಶಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಬೆಂಗಳೂರು ಇವರು ಒಂದೆರಡು ದಿನಗಳಲ್ಲಿ ಸುತ್ತೋಲೆಯನ್ನು ಹೊರಡಿಸಲಿರುವರು ಎಂದು ಎಸ್.ವಿ. ಸಂಕನೂರ ಅವರು ತಿಳಿಸಿದ್ದಾರೆ.