ತುಮಕೂರು: ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಪುಣ್ಯ ಸ್ಮರಣೆ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, “ದಾಸೋಹ ಭಾರತೀಯ ಪರಂಪರೆ. ತ್ರಿವಿಧ ದಾಸೋಹದ ಮೂಲಕ ಸಿದ್ದಗಂಗಾ ಮಠದಿಂದ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಆಗುತ್ತಿದೆ” ಎಂದಿದ್ದಾರೆ.
ಇಂದಿನ ಆಧುನಿಕ ಕಾಲದಲ್ಲೂ ದಾಸೋಹಕ್ಕೆ ಮಹತ್ವ ನೀಡುವ ಉದ್ದೇಶದಿಂದ ಇಂದು ರಾಜ್ಯಾದ್ಯಂತ ದಾಸೋಹ ದಿನಾಚರಣೆ ಮಾಡಲಾಗುತ್ತಿದೆ. ನಮ್ಮನ್ನು ನಾವು ದಾಸೋಹ ಪರಂಪರೆಯಲ್ಲಿ ಸಮರ್ಪಣೆ ಮಾಡಿಕೊಳ್ಳುವ ಸದುದ್ದೇಶ ಇದರಲ್ಲಿದೆ. ಸರ್ಕಾರದಿಂದ ಅನ್ನದಾಸೋಹ ಮಾಡುವ ಮಠಗಳಿಗೆ ಪಡಿತರ ವಿತರಿಸಲಾಗುತ್ತಿದೆ ಎಂದಿದ್ದಾರೆ.
ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸ ಯೋಜನೆಗೆ 150 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಆಶ್ರಯ ದಾಸೋಹ ನೀಡುವ ನಿಟ್ಟಿನಲ್ಲಿ 5000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.