ಕುಮಟಾ: ಪುರಸಭೆ ಮಾಜಿ ಅಧ್ಯಕ್ಷ ಮತ್ತು ಕಬ್ಬಡಿಪಟು ರೋಹಿದಾಸ ನಾಯ್ಕ (68) ಅವರು ವಯೋಸಹಜ ಅನಾರೋಗ್ಯದಿಂದ ಶನಿವಾರ ಬೆಳಗಿನಜಾವ ನಿಧನರಾದರು.
ಪಟ್ಟಣದ ದೇವರಹಕ್ಕಲನ ನಿವಾಸಿಯಾದ ರೋಹಿದಾಸ ನಾಯ್ಕ ಅವರು ಮಾಜಿ ಶಾಸಕ ದಿ. ಮೋಹನ ಕೆ ಶೆಟ್ಟಿ ಅವರ ಕಾಲದಲ್ಲಿ ಕಾಂಗ್ರೆಸ್ ಪ್ರಭಾವಿ ಮುಖಂಡರಾದ ಅವರು ಕುಮಟಾ ಪುರಸಭೆಯ ಅಧ್ಯಕ್ಷರಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಕುಮಟಾ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಕಬ್ಬಡಿ ಪಟುವಾದ ಅವರು ಅನೇಕ ಕಬ್ಬಡಿ ಪಂದ್ಯಾವಳಿಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಕ್ರೀಡೆಯನ್ನು ಪ್ರೋತ್ಸಾಹಿಸುವ ಜೊತೆಗೆ ಕಬ್ಬಡಿ ಅಕಾಡವನ್ನು ನಿರ್ಮಿಸಿಕೊಂಡು ಅದೆಷ್ಟೋ ಯುವಕರಿಗೆ ತರಬೇತಿ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಸಾಮಾಜಿಕ ಕಾರ್ಯಗಳಲ್ಲೂ ಅವರು ಕ್ರೀಯಾಶೀಲರಾಗಿ ಪಾಲ್ಗೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಇತ್ತೀಚಿನ ಕೆಲ ವರ್ಷಗಳಲ್ಲಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಆರೋಗ್ಯ ತೀರಾ ಹದಗೆಟ್ಟ ಪರಿಣಾಮ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ರೋಹಿದಾಸ ನಾಯ್ಕ ಅವರ ನಿಧನಕ್ಕೆ ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿಯುವ ಮೂಲಕ ಸಂತಾಪ ಸೂಚಿಸಿದ್ದಾರೆ.