ಶಿರಸಿ : ರಾಜ್ಯದ ಅತಿದೊಡ್ಡ ಜಾತ್ರೆ ಶಿರಸಿ ಮಾರಿಕಾಂಬಾ ಜಾತ್ರೆ ಮಾ. 15 ರಿಂದ ನಡೆಯಲಿದ್ದು, ಭದ್ರತೆ, ವಿದ್ಯುತ್ ವ್ಯವಸ್ಥೆ, ಸಿಸಿ ಕ್ಯಾಮರಾ, ಪಾರ್ಕಿಂಗ್ ವ್ಯವಸ್ಥೆಯನ್ನು ಸುವ್ಯವಸ್ತಿತವಾಗಿ ಮಾಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದರು.
ಇಲ್ಲಿನ ಮಿನಿ ವಿಧಾನ ಸೌಧದಲ್ಲಿ ನಡೆದ ಮಾರಿಕಾಂಬಾ ದೇವಿ ಜಾತ್ರೆಯ ಪ್ರಯುಕ್ತ ವಿವಿಧ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ಅವರಿಂದ ಜಾತ್ರೆಯ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಜಾತ್ರೆಯಲ್ಲಿ 3 ರಿಂದ 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ ಜಾತ್ರೆ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಜಾತ್ರೆ ಸಮಯದಲ್ಲಿ ಎಷ್ಟು ವಿದ್ಯುತ್ ಲೋಡ್ ಬೇಕಿದೆ ಎನ್ನುವುದನ್ನು ಮಾಹಿತಿ ಸಂಗ್ರಹಿಸಿ ಸಮರ್ಕಪ ಪೂರೈಕೆಗೆ ಕ್ರಮ ಕೈಗೊಳ್ಳಬೇಕಿದೆ ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಒಂದು ಫೀಡರ್ ಗೆ 8 ಟ್ರಾನ್ಸಫರ್ಮರ್ ಬರುತ್ತದೆ. ಹೀಗಾಗಿ ಲೋಡ್ ಸಮಸ್ಯೆ ಉಂಟಾಗುವುದಿಲ್ಲ ಎಂದರು.
ಬಸ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ನೀರಿನ ವ್ಯವಸ್ಥೆ, ಶೌಚಾಲಯ ಎಲ್ಲವನ್ನು ಸಮರ್ಕಪವಾಗಿ ನಿರ್ವಹಿಸಬೇಕು. ಎಲ್ಲ ಸಮಸ್ಯೆಗೆ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಿಕೊಳ್ಳಬೇಕು. ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಪರಸ್ಪರ ಹೊಂದಾಣಿಕೆಯೊಂದಿಗೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಅಗಲೀಕರಣ ಆಗಿದೆ. ಪಾರ್ಕಿಂಗ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಜನರಿಗೆ ಮಾಹಿತಿ ನೀಡುವ ಕಾರ್ಯ ಆಗಬೇಕು. ಹೊರಗಿನ ಭಕ್ತರಿಗೆ ಸಮಸ್ಯೆ ಆಗದಂತೆ ಪಾರ್ಕಿಂಗ್ ಹಾಗೂ ದೇವರ ಚಪ್ಪರಕ್ಕೆ ಹೋಗುವ ಮಾರ್ಗ ತಿಳಿಸಬೇಕು ಎಂದು ಸೂಚಿಸಿದರು.
ರಸಿ ಉಪವಿಭಾಗಾಧಿಕಾರಿ ದೇವರಾಜ್ ಆರ್ ಮಾತನಾಡಿ, ಜಾತ್ರೆಯ ಪೂರ್ವ ಸಿದ್ಧತೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಿದ್ದು, ಭದ್ರತೆ, ಸಾರಿಗೆ ಸೌಲಭ್ಯ, ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಕೆಲವು ಸ್ಥಳ ಪರಿಶೀಲನೆ ನಡೆಸಿದ್ದು, ಹಲವು ಕಡೆಕಡೆಗಳಲ್ಲಿ ಸಿಸಿ ಕ್ಯಾಮರಾ ಸೇರಿದಂತೆ ಭದ್ರತೆಗೆ ಬೇಕಾದ ವ್ಯವಸ್ಥೆ ಮಾಡಕೊಳ್ಳಲಾಗಿದೆ. ಜಾತ್ರೆ ವೇಳೆಗೆ ಟ್ರಾಫಿಕ್ ಸಮಸ್ಯೆ ಸೇರಿದಂತೆ ಸಮಸ್ಯೆಗಳನ್ನು ತಡೆಗಟ್ಟಲು ಯೋಜನೆ ರೂಪಿಸಲಾಗಿದೆ. ೬ ರಿಂದ ೮ ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ತಹಸೀಲ್ದಾರ್ ಎಂ ಆರ್ ಕುಲಕರ್ಣಿ, ಮಾರಿಕಾಂಬಾ ದೇವಾಲಯದ ಧರ್ಮದರ್ಶಿ ಮಂಡಳಿಯ ಸದಸ್ಯರು ಇದ್ದರು.