ಸಿದ್ದಾಪುರ:ತಾಲೂಕಿನ ಬಿದ್ರಕಾನ ಗ್ರಾಪಂ ವ್ಯಾಪ್ತಿಯ ಹೀನಗಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ನಡೆಯಿತು.
ಬಿದ್ರಕಾನ ಗ್ರಾಪಂ ಅಧ್ಯಕ್ಷ ಮಂಜುನಾಥ ಪಿ.ಗೌಡ ಕಾರ್ಯಕ್ರಮ ಉದ್ಘಾಟಿಸಿ ಜನತೆ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ತಹಸೀಲ್ದಾರ ಸಂತೋಷ ಭಂಡಾರಿ ಮಾತನಾಡುತ್ತ ಹಳ್ಳಿಯ ಜನತೆ ತಾಲೂಕು ಕೇಂದ್ರಕ್ಕೆ ಬರದೇ ಅವರ ಅಹವಾಲನನ್ನು ಗ್ರಾಮೀಣ ಪ್ರದೇಶದಲ್ಲಿಯೇ ಅಧಿಕಾರಿಗಳು ಪಡೆದು ಸರ್ಕಾರದ ಸೌಲಭ್ಯ ಸಿಗುವಂತೆ ಮಾಡುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯುಕ್ರಮವನ್ನು ಸರ್ಕಾರ ನಡೆಸುತ್ತಿದೆ.ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು ಇರುತ್ತಾರೆ. ಸರ್ಕಾರದ ವಿಶೇಷ ಯೋಜನೆಯಾದ ಗ್ರಾಮ ಒನ್ ತಾಲೂಕಿನ 23 ಗ್ರಾಪಂ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗವುದು. ಮೊದಲ ಆದ್ಯತೆಯಾಗಿ 10ರಿಂದ 15 ಗ್ರಾಪಂನಲ್ಲಿ ಈ ಯೋಜನೆ ಪ್ರಾರಂಭಿಸಲಾಗವುದು. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿ ಕಂದಾಯ ಇಲಾಖೆಯ ಸೌಲಭ್ಯದ ಕುರಿತು ಮಾಹಿತಿ ನೀಡಿದರು.
ನಂತರ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯಲ್ಲಿನ ಸೌಲಭ್ಯದ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಅರಣ್ಯ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಆರೋಗ್ಯ ಇಲಾಖೆಯಿಂದ ಕೆಎಫ್ಡಿ ಕಾಯಿಲೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಜಾಗೃತಿ ಹಾಗೂ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಯಿತು. ಮತದಾರರ ಪಟ್ಟಿಯಲ್ಲಿ ಹೆಸರು ಕಡಿಮೆ ಮಾಡುವ ಮತ್ತು ಸೇರ್ಪಡೆ, ಆಧಾರ ನೋಂದಣಿ ಕುರಿತು ಮಾಹಿತಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ತಹಸೀಲ್ದಾರ ಅವರು ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿದರು.
ಗ್ರಾಪಂ ಉಪಾಧ್ಯಕ್ಷೆ ಸರೋಜಾ ನಾಯ್ಕ, ಬಿಇಒ ಸದಾನಂದ ಸ್ವಾಮಿ, ಸರ್ವೆ ಇಲಾಖೆಯ ಸುಂದರ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ವಿವೇಕಾನಂದ ಹೆಗಡೆ, ತಾಪಂ ಅಧಿಕಾರಿ ದಿನೇಶ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಪಂ ಸದಸ್ಯರಿದ್ದರು. ಪಿಡಿಒ ಸಹನಾ ಸ್ವಾಗತಿಸಿದರು.ಕಂದಾಯ ಅಧಿಕಾರಿ ರವಿ ಗೌಡರ್, ಬಸವರಾಜ್ ಬಿಸ್ನಾಳ, ಕಾರ್ಯಕ್ರಮ ನಿರ್ವಹಿಸಿದರು.