ನವದೆಹಲಿ: ಹಿಂದೂಗಳು ಬಹುಸಂಖ್ಯಾತರಾಗಿಲ್ಲದ ಆದರೆ ಅಲ್ಪಸಂಖ್ಯಾತರಿಗೆ ಮೀಸಲಾದ ಹಲವಾರು ಕೇಂದ್ರ ಯೋಜನೆಗಳನ್ನು ಪಡೆಯಲು ಸಾಧ್ಯವಾಗದಿರುವಂತಹ ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು, ಉದ್ದೇಶಿತ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಈ ಕಾರಣಕ್ಕೆ ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸುವ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶನಗಳನ್ನು ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ತಿಳಿಸಿದೆ.
ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವು, ಹಿಂದೂ ಧರ್ಮ, ಜುಡಾಯಿಸಂ, ಬಹಾಯಿಸಂನ ಅನುಯಾಯಿಗಳು ಈ 10 ರಾಜ್ಯಗಳಲ್ಲಿ ತಮ್ಮ ಇಚ್ಛೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬಹುದೇ ಮತ್ತು ಅವರನ್ನು ರಾಜ್ಯದೊಳಗೆ ಅಲ್ಪಸಂಖ್ಯಾತರೆಂದು ಗುರುತಿಸುವುದಕ್ಕೆ ಸಂಬಂಧಿಸಿದ ವಿಷಯಗಳನ್ನು ರಾಜ್ಯ ಮಟ್ಟದಲ್ಲಿ ಪರಿಗಣಿಸಬಹುದು ಎಂದು ತಿಳಿಸಿದೆ.
ಉಪಾಧ್ಯಾಯ ಅವರು ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಕಾಯ್ದೆ, 2004 ರ ಸೆಕ್ಷನ್ 2(ಎಫ್) ನ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ ಮತ್ತು ಇದು ಕೇಂದ್ರಕ್ಕೆ ಅನಿಯಂತ್ರಿತ ಅಧಿಕಾರವನ್ನು ನೀಡುತ್ತದೆ ಎಂದು ಆರೋಪಿಸಿದ್ದಾರೆ.
ಅಲ್ಲದೇ, ಲಡಾಖ್, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್ ಮತ್ತು ಮಣಿಪುರದಲ್ಲಿ ನಿಜವಾದ ಅಲ್ಪಸಂಖ್ಯಾತರಾದ ಜುದಾಯಿಸಂ, ಬಹಾಯಿಸಂ ಮತ್ತು ಹಿಂದೂ ಧರ್ಮದ ಅನುಯಾಯಿಗಳು ಅವರ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸಲು ಸಾಧ್ಯವಿಲ್ಲ, ಇದು ನೈತಿಕವಾದುದಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವಾಲಯ, ರಾಜ್ಯ ಸರ್ಕಾರಗಳು ಧಾರ್ಮಿಕ ಅಥವಾ ಭಾಷಾ ಸಮುದಾಯವನ್ನು ಈ ರಾಜ್ಯದೊಳಗೆ ಅಲ್ಪಸಂಖ್ಯಾತ ಸಮುದಾಯವೆಂದು ಘೋಷಿಸಬಹುದು ಎಂದು ಹೇಳಿದೆ
“ಉದಾಹರಣೆಗೆ, ಮಹಾರಾಷ್ಟ್ರ ಸರ್ಕಾರವು ‘ಯಹೂದಿಗಳನ್ನು’ ರಾಜ್ಯದೊಳಗೆ ಅಲ್ಪಸಂಖ್ಯಾತ ಸಮುದಾಯವೆಂದು ಸೂಚಿಸಿದೆ. ಇದಲ್ಲದೆ, ಕರ್ನಾಟಕ ಸರ್ಕಾರವು ಉರ್ದು, ತೆಲುಗು, ತಮಿಳು, ಮಲಯಾಳಂ, ಮರಾಠಿ, ತುಳು, ಲಮಾಣಿ, ಹಿಂದಿ, ಕೊಂಕಣಿ ಮತ್ತು ಗುಜರಾತಿ ಭಾಷೆಗಳನ್ನು ಕರ್ನಾಟಕ ರಾಜ್ಯದೊಳಗೆ ಅಲ್ಪಸಂಖ್ಯಾತರ ಭಾಷೆ ಎಂದು ಅಧಿಸೂಚನೆ ಹೊರಡಿಸಿದೆ” ಎಂದಿದೆ.