ಶಿರಸಿ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆಗೆ ಕಾರಣವಾದ ಈಶ್ವರಪ್ಪರವರನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬಿಜೆಪಿ ಸರ್ಕಾರ ಈಶ್ವರಪ್ಪನವರ ರಕ್ಷಣೆಗೆ ನಿಂತಿರುವುದು ಪ್ರಜಾಪ್ರಭುತ್ವದ ವಿರುದ್ಧ ಕಾರ್ಯವಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅವರು ನಗರದ ಬಸ್ ಸ್ಟ್ಯಾಂಡ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಬದಲಿಗೆ ಆತ್ಮಹತ್ಯೆಗೆ ಕಾರಣವಾದವರ ಪರವಾಗಿ ನಿಂತಿದೆ. ಮೋದಿಯವರು ಈಶ್ವರಪ್ಪನವರ ರಕ್ಷಣೆಗೆ ನಿಂತಿದ್ದಾರೆ. ದೇಶದಲ್ಲಿ ಬೆಲೆ ಏರಿಕೆಯಿಂದ ಜನ ಹೈರಾಣಾಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಿದ ಎಲ್ಲಾ ಕಾಮಗಾರಿಗಳು ಸ್ಪಷ್ಟವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳು ಕಳಪೆಕಾಮಗಾರಿಯಾಗಿದೆ. ಕಾರಣ ಗುತ್ತಿಗೆದಾರರಿಗೆ ಕಮಿಷನ್ ಎಂಬ ಭೂತ ಕಾಡುತ್ತಿದೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಮಾತನಾಡಿ, ಜೈಲಿಗೆ ಹೋಗುವ ರಾಜಕಾರಣಿಗಳ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿ ಇದೆ. ಅಮಾಯಕರನ್ನು ಬಲಿ ಪಡೆಯುವ ಪಕ್ಷ ಬಿಜೆಪಿ ಆಗಿದೆ. ಈಶ್ವರಪ್ಪನ ನಡೆತೆಗೆ, ಅವರ ಕಮಿಷನ್ ಆಸೆಗೆ ಗುತ್ತಿಗೆದಾರನ ಸಾವಾಗಿದೆ. ಆದರೂ ಸಹ ಸರ್ಕಾರ ಅವರ ಪರವಾಗಿ ನಿಂತಿರುವುದು ನಾಚಿಕೆಗೇಡು. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸು ಬಿಜೆಪಿ ಸರ್ಕಾರಕ್ಕಿಲ್ಲ. ಭ್ರಷ್ಟ ಈಶ್ವರಪ್ಪನನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ್ ಮಾತನಾಡಿ, ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.
ಪರ್ಸ೦ಟೇಜ್ ಬಿಜೆಪಿ ಸರ್ಕಾರ ಆಗಿದೆ ಎಂದರು.
ನಗರದ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಸುಷ್ಮಾರಾಜ್ ಗೋಪಾಲ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಅರಣ್ಯ ಭೂಮಿ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ರವೀಂದ್ರ ನಾಯ್ಕ ಸೇರಿ ಹಲವರು ಇದ್ದರು.