ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ (ಭಾನುವಾರ) ಮಳೆ ಮೂರು ದಿನಗಳ ಕಾಲ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಮೇ 17ರ ವರೆಗೆ ರಾಜ್ಯಾದ್ಯಂತ ಮಳೆಯಾಗಲಿದ್ದು, ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಒಳನಾಡಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಧಾರವಾಡ, ಬಳ್ಳಾರಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿಯಲ್ಲಿ ಮೇ 15, 16ರಂದು ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು,ಗಾಳಿಯೂ ಜೋರಾಗಿ ಬೀಸಲಿದೆ. ಕರ್ನಾಟಕದ ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ.
ಮುಂದಿನ 3 ದಿನಗಳ ಕಾಲ ಕರ್ನಾಟಕದ ಒಳನಾಡು ಮತ್ತು ಕರಾವಳಿಯಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಆಗಾಗ ಗುಡುಗು ಸಹಿತ ಮಳೆಯೂ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸಾಮಾನ್ಯವಾಗಿ ಮಾನ್ಸೂನ್ ಜೂನ್ 1ರ ಸುಮಾರಿಗೆ ಕೇರಳಕ್ಕೆ ಮಾನ್ಸೂನ್ (ಮುಂಗಾರು) ಆಗಮಿಸುತ್ತದೆ. ಜೂನ್ ಮಧ್ಯದ ವೇಳೆಗೆ ಭಾರತದ ಉಳಿದ ಭಾಗಗಳನ್ನು ಆವರಿಸುತ್ತದೆ. ಆದರೆ, ಈ ಬಾರಿ ಮೇ 27ರಂದು ಕೇರಳಕ್ಕೆ ನೈಋತ್ಯ ಮುಂಗಾರಿನ ಪ್ರವೇಶವಾಗಲಿದೆ ಎಂದು ಹೇಳಲಾಗಿದೆ. ಮೇ 15ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.