ಕಾರವಾರ: ತಾಲೂಕಿನ ಚೆಂಡಿಯಾ ಗ್ರಾಮದ ಸಾಯಿ ಮಂದಿರದಲ್ಲಿ ಮಂಗಳವಾರ ಭಾರತೀಯ ಜನತಾ ಪಕ್ಷದ ಕಾರವಾರ ಗ್ರಾಮೀಣ ಮಂಡಲದ ವತಿಯಿಂದ ನಡೆದ ಚೆಂಡಿಯಾ ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಅಧ್ಯಕ್ಷರ ಸಭೆಯಲ್ಲಿ ಶಾಸಕಿ ರೂಪಾಲಿ ಎಸ್.ನಾಯ್ಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಸಮಾಜದ ಕಡೆಯ ವ್ಯಕ್ತಿಗೂ ತಲುಪಬೇಕು, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.
ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಫಲಾನುಭವಿಗಳಿಗೆ ಅದರ ಲಾಭ ತಲುಪಬೇಕು. ಎಲ್ಲರೂ ಒಗ್ಗಟ್ಟಿನಿಂದ ಸರ್ಕಾರದ ಯೋಜನೆಗಳ ಮಾಹಿತಿ ಜನರಿಗೆ ತಲುಪುವಂತೆ ಮಾಡಬೇಕು. ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸಬೇಕು. ಜನರಿಗೆ ಅವಶ್ಯಕವಾಗಿರುವ ಯೋಜನೆಗಳಾದ ಆಯುಷ್ಮಾನ್ ಭಾರತ, ಕಿಸಾನ್ ಸಮ್ಮಾನ್, ಸಂಧ್ಯಾ ಸುರಕ್ಷಾ, ಉಜ್ವಲ ಯೋಜನೆ, ಜನ್ಧನ್, ಉಚಿತ ವಿದ್ಯುತ್, ಜಲಜೀವನ ಮಿಷನ್, ಮುದ್ರಾ ಯೋಜನೆ, ವಸತಿ ಯೋಜನೆ ಹಾಗೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಬೇಟಿ ಪಡಾವೊ ಬೇಟಿ ಬಚಾವೋ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳಿವೆ. ಇವೆಲ್ಲದರ ಮಾಹಿತಿ ಜನರಿಗೆ ನೀಡಿ ಲಾಭ ಪಡೆದುಕೊಳ್ಳಲು ಪ್ರೇರೇಪಿಸಬೇಕು ಎಂದರು.
ಉತ್ತರಕನ್ನಡ ಸಹ ಪ್ರಭಾರಿ ಪ್ರಸನ್ನ ಕೆರೆಕೈ ಮಾತನಾಡಿ, ಪಕ್ಷದ ಸಂಘಟನೆಯಲ್ಲಿ ಯಾವುದೇ ರಾಜಿ ಮಾಡಬಾರದು. ಜನರೊಟ್ಟಿಗೆ ನಿರಂತರ ಒಡನಾಟ ಇಟ್ಟುಕೊಂಡು ಪಕ್ಷವನ್ನು ಸಂಘಟಿಸಬೇಕು. ಸರ್ಕಾರದ ಯೋಜನೆ ಮತ್ತು ಫಲಾನುಭವಿಗಳನ್ನು ಗುರುತಿಸಬೇಕು. ಸಭೆಗಳಲ್ಲಿ ಪಾಲ್ಗೊಳ್ಳುವಾಗ ಚರ್ಚಿಸುವ ವಿಷಯಗಳನ್ನು ಬರೆದಿಟ್ಟುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ ಗುನಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಮಂಡಲದ ಪ್ರಧಾನ ಕಾರ್ಯದರ್ಶಿ ಸುಜಾತಾ ಬಾಂದೇಕರ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಉದಯ ನಾಯ್ಕ, ಶಕ್ತಿ ಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.