
ಕುಮಟಾ: ತಾಲೂಕಿನ ಖೈರೆ, ಮಿರ್ಜಾನ, ತಾರಿಬಾಗಿಲು ಹಾಗೂ ಕೊಡ್ಕಣಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ, ನೆರೆ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಂಡ ಸಂತ್ರಸ್ತರ ಕುಟುಂಬಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ, ಸಾಂತ್ವನ ತಿಳಿಸಿದರು.
ನಂತರ ಮಾತನಾಡಿದ ಅವರು, ಕಾಳಜಿ ಕೇಂದ್ರದಲ್ಲಿರುವ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲು ಕಂಜೂಸು ಮಾಡಬಾರದು ಎಂದು ಈಗಾಗಲೇ ಮೇಲಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕಾರ್ಯನಿರ್ವಹಿಸಲು ಕ್ರಮವಹಿಸಬೇಕು ಎಂದು ಸಹಾಯಕ ಆಯುಕ್ತ ರಾಹುಲ ಪಾಂಡೆ ಅವರಿಗೆ ತಿಳಿಸಿದರು
ಅಲ್ಲದೇ, ಕಾಳಜಿ ಕೇಂದ್ರಗಳಲ್ಲಿ ಊಟೋಪಚಾರದಲ್ಲಿ ಲೋಪದೋಷ ಬಾರದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದ ಅವರು, ಹಾನಿಯ ಪ್ರಮಾಣವನ್ನು ಶೀಘ್ರದಲ್ಲಿ ಪರಿಶೀಲಿಸಿ, ಸೂಕ್ತ ಪರಿಹಾರ ಒದಗಿಸಲು ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಸಿ.ಟಿ.ನಾಯ್ಕ, ನೋಡಲ್ ಅಧಿಕಾರಿ ವಿಶ್ವನಾಥ ಭಟ್ಟ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಮೃತಾ ಶಾನಭಾಗ, ಗ್ರಾ.ಪಂ ಅಧ್ಯಕ್ಷ ಪರಮೇಶ್ವರ ಪಟಗಾರ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸದಸ್ಯ ಆದಿತ್ಯ ಶೇಟ್, ಪವನ ಶೇಟ್, ಪ್ರಮುಖರಾದ ಗಣೇಶ ಅಂಬಿಗ ಸೇರಿದಂತೆ ಮತ್ತಿತರರು ಇದ್ದರು