
ಕಾರವಾರ: ಜಿಲ್ಲೆಯಲ್ಲಿ ಕರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿ ಗಳಿಗೆ ಕೋವಿಡ್ ನಿರ್ವಹಣಾ ಅಧಿಕಾರ ನೀಡಿದ್ದು ಪ್ರದತ್ತವಾದ ಅಧಿಕಾರ ಬಳಸಿ ಜಿಲ್ಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿರುವುದಾಗಿ ಜಿಲ್ಲಾಧಿಕಾರಿ ಮುಲ್ಲೈಮುಹಿಲನ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದ್ದು, 50 ಜನರ ಮಿತಿಯಲ್ಲಿ ಮಾತ್ರ ಸಮಾರಂಭಕ್ಕೆ ಅವಕಾಶ ನೀಡಲಾಗುತ್ತದೆ. ಹಾಗೂ ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದವರ ಮಾಹಿತಿ ಪಡೆದು ಎರಡುದಿನಗಳ ಒಳಗಾಗಿ ಅವರ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲಾಗುವುದು. ಹಾಗೂ ಧಾರ್ಮಿಕ ಸ್ಥಾನಗಳಲ್ಲಿ ದೈನಂದಿನ ಪೂಜೆ ಹೊರತು ಪಡಿಸಿ ಸೇವಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದ್ದು ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಾಗೂ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ವಾರಕ್ಕೊಮ್ಮೆ ಕೋವಿಡ್ ಟೆಸ್ಟ್ ನಡೆಸಲಾಗುವುದು.
ಜಿಲ್ಲೆಗೆ ಪ್ರವಾಸಕ್ಕೆ ಬಂದಿರುವವರಿಗೆ ಹಾಗೂ ಪ್ರವಾಸಕ್ಕೆ ಬೇರೆ ಕಡೆಗೆ ತೆರಳಿ ವಾಪಸ್ಸಾದವರಿಗೂ ಕೂಡ ಕೋವಿಡ್ ಟೆಸ್ಟ್ ಕಡ್ಡಾಯವಾಗಿ ನಡೆಸಲಾಗುತ್ತದೆ. ಹಾಗೂ ಜಿಲ್ಲೆಯ ಎಲ್ಲಾ ಪ್ರವಾಸಿತಾಣಗಳಲ್ಲಿ ಕೋವಿಡ್ ನಿಯಮ ಪಾಲನೆಯನ್ನು ಗಮನಿಸಲು ಪೋಲೀಸ್ ಸಿಬ್ಬಂದಿಗಳನ್ನು ನೇಮಿಸಲಾಗುತ್ತದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರ ಮುಂತಾದ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿದ್ದು ಈಗಾಗಲೇ ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಭೂಕುಸಿತ ರಸ್ತೆಕುಸಿತಗಳಿಂದಾಗಿ ಸಂಪರ್ಕ ವ್ಯವಸ್ಥೆ ಹಾನಿಯಾಗಿ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ . ಈ ನಡುವೆ ಕರೋನಾ ಸೋಂಕು ಹರಡದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈಮುಹಿಲನ್ ಹೇಳಿದ್ದಾರೆ.