ಕುಮಟಾ: ತಾಲೂಕಿನ ಗುಡ್ಡಗಾಡು ಪ್ರದೇಶವಾದ ಯಾಣದ ಅತ್ತಿಬೆಟ್ಟು ಅಂಗನವಾಡಿ ಕೇಂದ್ರಕ್ಕೆ ಬುಧವಾರ ಕತಗಾಲ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ತೆರಳಿ, ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶದ ಜನರಿಗೆ ಕೋವಿಡ್ ಲಸಿಕೆ ನೀಡಿದರು.
ಯಾಣ ಹಾಗೂ ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶದ ಜನತೆ ಸರಿಯಾದ ಸಮಯಕ್ಕೆ ಬಸ್ ಇಲ್ಲದೇ ಹಾಗೂ ಇನ್ನಿತರ ಕಾರಣಗಳಿಂದ ಪಟ್ಟಣಕ್ಕೆ ಆಗಮಿಸಿ, ಕೋವಿಡ್ ಲಸಿಕೆ ಪಡೆಯಲು ಪರದಾಡುವಂತಾಗಿತ್ತು. ಇದನ್ನು ಮನಗಂಡ ಜಿ.ಪಂ. ನಿಕಟಪೂರ್ವ ಸದಸ್ಯ ಗಜಾನನ ಪೈ ಹಾಗೂ ಸ್ಥಳೀಯ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರು ಯಾಣ ಭಾಗಕ್ಕೆ ತೆರಳಿ, ಲಸಿಕೆ ಒದಗಿಸುವಂತೆ ಆರೋಗ್ಯ ಇಲಾಖೆಗೆ ವಿನಂತಿಸಿದ್ದರು. ಇದಕ್ಕೆ ಸ್ಪಂದಿಸಿದ ಆರೋಗ್ಯ ಇಲಾಖೆಯು, ಬುಧವಾರ ಯಾಣಕ್ಕೆ ತೆರಳಿ, ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶದ ಜನರಿಗೆ ಲಸಿಕೆ ನೀಡಿದರು. ಅಲ್ಲದೇ, ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಸ್ಥಳೀಯ ಗ್ರಾ.ಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಅಳಕೋಡ ಗ್ರಾ.ಒಂ ಅಧ್ಯಕ್ಷೆ ಕೇಸರಿ ಜೈನ, ಸದಸ್ಯ ರಾಜೀವ ಭಟ್ಟ, ಬಿಜೆಪಿ ಬೂತ್ ಅಧ್ಯಕ್ಷ ಈಶ್ವರ ಮರಾಠಿ, ಸಾಮಾಜಿಕ ಕಾರ್ಯಕರ್ತ ಉದಯ ಜೈನ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿದ್ದರು