Slide
Slide
Slide
previous arrow
next arrow

‘ಸ್ಥಳೀಯರ ಸಹಭಾಗಿತ್ವದಲ್ಲಿ ಸಮುದ್ರ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ’

300x250 AD

ಕಾರವಾರ: ಸ್ಥಳೀಯ ಜನರ ಸಹಭಾಗಿತ್ವದಲ್ಲಿ ಸಮುದ್ರ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿ.ಪಂ. ಉತ್ತರ ಕನ್ನಡ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಮುದ್ರ ತ್ಯಾಜ್ಯ ನಿರ್ವಹಣೆ ಕುರಿತ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯು ಅತಿ ಉದ್ದದ ಕರಾವಳಿ ತೀರ ಪ್ರದೇಶವನ್ನು ಹೊಂದಿದ್ದು, ಇದರಿಂದ 5 ತಾಲ್ಲೂಕುಗಳ ಉದ್ಯೋಗ, ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಸಮುದ್ರದ ಮೇಲೆ ಹೆಚ್ಚು ಅವಲಂಬಿತವಾಗಿವೆ. ಹೀಗಾಗಿ ಜಿಲ್ಲಾ ಪಂಚಾಯತ್ ವತಿಯಿಂದ ತ್ಯಾಜ್ಯ ಸಂಗ್ರಹ, ವಿಂಗಡನೆ ಮತ್ತು ನಿರ್ವಹಣೆ ಕುರಿತು ಸಾಕಷ್ಟು ತರಬೇತಿ ಕಾರ್ಯಗಾರಗಳನ್ನು ನಡೆಸಲಾಗುತ್ತಿದೆ. ಆದರೆ ತರಬೇತಿಯಲ್ಲಿ ಪಡೆದ ಜ್ಞಾನ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದ್ದು, ಜನರಿಗೆ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗುತ್ತಿಲ್ಲ. ಸಮುದ್ರ ತ್ಯಾಜ್ಯ ನಿರ್ವಹಣೆ ಬಗ್ಗೆ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸಮಗ್ರವಾಗಿ ತಿಳಿದುಕೊಳ್ಳದೇ ಇರುವುದರಿಂದ ಸ್ಪಷ್ಟವಾಗಿ ತಿಳಿಯುತ್ತದೆ. ಹೀಗಾಗಿ ಎಲ್ಲ ಅಧಿಕಾರಿಗಳು ನುರಿತ ತಜ್ಞರಿಂದ ಪಡೆದುಕೊಂಡ ಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕಿದೆ. ಈ ಕಾರ್ಯ ಯಶಸ್ವಿಯಾಗಲು ಪ್ರತಿಯೊಂದು ಇಲಾಖೆಯ ಸಹಾಯ, ಸಹಕಾರ ಅಗತ್ಯವಾಗಿದೆ ಎಂದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಫ್‌ಎಫ್‌ಪಿಒ ಟೊಂಕಾ ಕಾಸರಕೋಡ ನಿರ್ದೇಶಕ ಪ್ರಕಾಶ್ ನಾಗಪ್ಪ ಮೇಸ್ತ, ಸಮುದ್ರ ಸ್ವಚ್ಛತೆ ಪರಿಕಲ್ಪನೆ ಮತ್ತು ಮಹತ್ವ ವಿಷಯದ ಮೇಲೆ ಮಾಹಿತಿ ನೀಡಿದರು. ಉಡುಪಿ ಜಿ.ಪಂ. ಸಿಪಿಓ ಶ್ರೀನಿವಾಸ್ ರಾವ್ ಅವರು ಸಮುದ್ರ ತ್ಯಾಜ್ಯ ನಿರ್ವಹಣಾ ಕಾರ್ಯತಂತ್ರಗಳು ವಿಷಯದ ಮೇಲೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ (ಕಾರವಾರ) ಸಾಗರ ವಿಜ್ಞಾನ ನಿವೃತ್ತ ಪ್ರಾಧ್ಯಾಪಕ ಡಾ. ವಿಎನ್ ನಾಯಕ ಅವರು ಸಮುದ್ರ ತ್ಯಾಜ್ಯ ನಿರ್ವಹಣೆಗೆ ಪೂರಕವಾದ ಕಾನೂನು ಮತ್ತು ನಿಯಮಗಳ ಬಗ್ಗೆ ಸವಿಸ್ತಾರವಾಗಿ ವಿಷಯ ಮಂಡಿಸಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಶಿಕ್ಷಣಾರ್ಥಿಗಳಾಗಿ ಭಾಗವಹಿಸಿದ್ದರು.

300x250 AD

ಈ ಸಂದರ್ಭದಲ್ಲಿ ಎಸ್‌ಐಆರ್‌ಡಿಯ ಬೋಧಕ ಪ್ರಕಾಶ್ ಎಸ್.ಎಚ್, ಜಿಲ್ಲಾ ಪಂಚಾಯತ್‌ನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಎನ್.ಜಿ. ನಾಯಕ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್, ಪ್ರಭಾರ ಮುಖ್ಯ ಲೆಕ್ಕಾಧಿಕಾರಿ ಡಾ. ಆನಂದ ಸಾಹಬೀಬ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿ.ಪಂ. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top