ಬೆಂಗಳೂರು: ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಜಲ ವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾಗಿರುವ ಪ್ರದೇಶದ ಸಂತ್ರಸ್ತರ ಸಮಸ್ಯೆಗಳ ಕುರಿತು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಉಪಸ್ಥಿತರಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶರಾವತಿ ಜಲ ವಿದ್ಯುತ್ ಯೋಜನೆಯಾಗಿ ಮುಳುಗಡೆಯಾದ ಪ್ರದೇಶಗಳ ಕೆಲವು ನಿರಾಶ್ರಿತರಿಗೆ ಈವರೆಗೂ ಸಹ ಸರಕಾರದಿಂದ ಯಾವುದೇ ರೀತಿಯ ಸೂಕ್ತ ಪರಿಹಾರ ದೊರೆತಿಲ್ಲ ಅವರಿಗೆ ಶೀಘ್ರ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಸಚಿವರು ಮನವಿ ಮಾಡಿದರು.
ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂ ಮಂಜೂರಾತಿಗಾಗಿ ವಿಧಿಸಿರುವ ಮೂರು ತಲೆಮಾರಿನವರೆಗೆ ಅಂದರೆ ಸುಮಾರು 75 ವರ್ಷಗಳು ಪ್ರಧಾನವಾಗಿ ಅರಣ್ಯಗಳಲ್ಲಿ ವಾಸಿಸಿದ ದಾಖಲೆಗಳನ್ನು ಪೂರೈಸುವುದಕ್ಕೆ ಮಲೆನಾಡಿನ ಹಾಗೂ ಕರಾವಳಿ ಭಾಗದ ಅರಣ್ಯವಾಸಿಗಳಿಗೆ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಹಕ್ಕು ಕಾಯ್ದೆಯಲ್ಲಿ ಅರಣ್ಯವಾಸಿಗಳಿಗೆ ಅನೂಕುಲವಾಗುವ ರೀತಿಯಲ್ಲಿ ಸರಳಿಕರಣಗೊಳಿಸುವಂತೆ ಕೂಡ ಸಚಿವ ಹೆಬ್ಬಾರ್ ಮುಖ್ಯಮಂತ್ರಿಗಳಿಗೆ ವಿನಂತಿಸಿದರು. ಸಚಿವರ ಬೇಡಿಕೆಗೆ ಸಕಾರಾತ್ಮಕ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರ ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಉಮೇಶ್ ಕತ್ತಿ, ಆರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಶಾಸಕರಾದ ಹರತಾಳು ಹಾಲಪ್ಪ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು