Slide
Slide
Slide
previous arrow
next arrow

ಪರಿಸರ ಸ್ವಚ್ಛತೆಗಾಗಿ ಪ್ರತಿ ದಿನವೂ ಸಮಯ ಮೀಸಲಿಡಿ: ಸತೀಶ್ ಸೈಲ್

300x250 AD

ಕಾರವಾರ: ಪ್ರತಿಯೊಬ್ಬ ನಾಗರೀಕರೂ ಕೂಡಾ ತಮ್ಮ ಮನೆಯಲ್ಲಿ ಮತ್ತು ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಸ್ವಚ್ಛತಾ ಚಟುವಟಿಕೆಗಳಿಗಾಗಿ ಪ್ರತಿನಿತ್ಯ ಕನಿಷ್ಠ ಸಮಯವನ್ನು ಮೀಸಲಿಡುವ ಮೂಲಕ ನಮ್ಮ ಸುತ್ತಲಿನ ಪರಿಸರವನ್ನು ಮಲಿನವಾಗದಂತೆ ತಡೆಯಬೇಕು ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಎಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಹೇಳಿದರು.

ಅವರು ಸೋಮವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ನಗರಾಭಿವೃದ್ಧಿ ಕೋಶ ಉತ್ತರ ಕನ್ನಡ ವತಿಯಿಂದ ಸ್ವಚ್ಛತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ -2024 ರ ಆಂದೋಲನದ ಅಂಗವಾಗಿ ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ಆಯೋಜಿಸಿದ್ದ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಸರ ಸ್ವಚ್ಛತೆಯ ಚಟುವಟಿಕೆಗಳು ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ಪ್ರತಿಯೊಬ್ಬ ಸಾರ್ವಜನಿಕರ ದೈನಂದಿನ ಚಟುವಟಿಕೆಯ ಭಾಗವಾಗಿ ನಿರಂತರವಾಗಿ ನಡೆಯಬೇಕು. ಮಾಜಾಳಿಯಿಂದ ಕಾರವಾರದವರೆಗೆ ಬೀಚ್ ನಲ್ಲಿ ಸ್ವಚ್ಛತೆಯನ್ನು ಕಾಪಾಡಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಲ್ಲಿ ಬೀಚ್‌ನಲ್ಲಿ ಅನೈರ್ಮಲ್ಯ ಉಂಟಾಗುವುದನ್ನು ತಡೆಯಬಹುದು. ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಶೌಚಾಲಯಗಳು ಸೇರಿದಂತೆ, ಕಚೇರಿಯ ಅವರಣವನ್ನು ಸ್ವಚ್ಛವಾಗಿಡಬೇಕು ಎಂದ ಅವರು, ಕಾರವಾರ ನಗರವನ್ನು ಗ್ರೀನ್ ಸಿಟಿ ಮಾಡುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.

300x250 AD

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಇಂದಿನಿಂದ 15 ದಿನಗಳ ಕಾಲ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಾದ್ಯಂತ ಈ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮನೆ, ಶಾಲೆ, ಕಾಲೇಜು, ಕಚೇರಿಗಳಲ್ಲಿ ಸ್ವಚ್ಚತೆಯನ್ನು ಕಾಪಾಡಬೇಕು. ಜಿಲ್ಲೆಯಲ್ಲಿ ಈಗಾಗಲೇ ಮನೆ ಮನೆಯಿಂದ ಕಸ ಸಂಗ್ರಹಣೆ ಕಾರ್ಯ ನಡೆಯುತಿದ್ದು, ಹೀಗೆ ಸಂಗ್ರಹಿಸಲಾದ ಕಸವನ್ನು ಪರಿಸರಕ್ಕೆ ಹಾನಿಯಾಗದಂತೆ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದರ ಜೊತೆಗೆ ಅವುಗಳನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸಲು ಎಂ.ಆರ್.ಎಫ್ ಘಟಕಗಳನ್ನು ಆರಂಭಿಸಲಾಗುತ್ತಿದೆ. ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ದಿ ಕಾರ್ಯಕ್ರಮಗಳ ಗುರಿ ಸಾಧನೆಗೆ, ಪ್ರತಿಯೊಬ್ಬರಿಗೂ ಶುದ್ದ ನೀರು ಹಾಗೂ ಶುದ್ದ ಪರಿಸರ ನಿರ್ಮಾಣ ಮಾಡುವ ಗುರಿಯೂ ಇದ್ದು, ಈ ಸಾಧನೆಗೆ ಪ್ರತಿಯೊಬ್ಬ ಸಾರ್ವಜನಿಕರೂ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್ ಮತ್ತಿತರರು ಉಪಸ್ಥಿತರಿದ್ದರು.
ನಗರ ಸ್ವಚ್ಚತೆಯನ್ನು ಕಾಪಾಡುವಲ್ಲಿ ಶ್ರಮವಹಿಸುವ ಸ್ವಚ್ಛತಾ ಕಾರ್ಮಿಕರು ಹಾಗೂ ಕಸ ಸಂಗ್ರಹಣಾ ವಾಹನಗಳ ಮಹಿಳಾ ಚಾಲಕಿಯರನ್ನು ಸನ್ಮಾನಿಸಲಾಯಿತು. ಪರಿಸರ ಸ್ವಚ್ಛತೆ ಕಾಪಾಡುವ ಕುರಿತು ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ಸಹಿ ಸಂಗ್ರಹ ಅಭಿಯಾನ ನಡೆಯಿತು.
ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ನಡೆದ, ಬೃಹತ್ ಸ್ವಚ್ಛತಾ ಶ್ರಮದಾನದಲ್ಲಿ ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು, ಸ್ವಸಹಾಯ ಸಂಘದ ಸದಸ್ಯರು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಎನ್.ಎಸ್.ಎಸ್, ಎನ್.ಸಿ.ಸಿ, ಸ್ಕೌಟ್ಸ್ ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top