ಸಿದ್ದಾಪುರ: ಪ್ರತಿವರ್ಷದಂತೆ ಈ ಬಾರಿಯೂ ಸಹ ಸಿದ್ದಾಪುರ ಉತ್ಸವ ಫೆ.8 ಶನಿವಾರ ಹಾಗೂ 9 ರವಿವಾರ 2 ದಿನಗಳ ಕಾಲ ಪಟ್ಟಣದ ನೆಹರು ಮೈದಾನದಲ್ಲಿ ನಡೆಯಲಿದ್ದು ಈ ಉತ್ಸವದಲ್ಲಿ ಸಾರ್ವಜನಿಕರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಿದ್ದಾಪುರ ಉತ್ಸವ ಸಮಿತಿಯ ಅಧ್ಯಕ್ಷರಾದ ಕೆ.ಜಿ.ನಾಯ್ಕ ಹಣಜೀಬೈಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉತ್ಸವದ ಅಂಗವಾಗಿ ನಡೆಯಲಿರುವ ಕ್ರೀಡಾ ಸ್ಪರ್ಧೆಯು ಬೆಳಗ್ಗೆ 9 ಗಂಟೆಯಿಂದ ನಡೆಯಲಿದ್ದು, ರಸ್ತೆ ಓಟ, ಹಗ್ಗ ಜಗ್ಗಾಟ, ಸಂಗೀತ ಕುರ್ಚಿ, ಗೋಣಿಚೀಲ ಓಟದ ಸ್ಪರ್ಧೆ ಹಾಗೂ ಮಧ್ಯಾಹ್ನ 3.30 ರಿಂದ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸಂಜೆ 6 ರಿಂದ 7.30 ರವರೆಗೆ ಸ್ಥಳೀಯ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಹಾಗೂ ರಾತ್ರಿ 7.30ರಿಂದ ಉದ್ಘಾಟನಾ ಕಾರ್ಯಕ್ರಮ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಪೀಠಾಧೀಶರಾದ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾಗೂ ಶಾಸಕ ಭೀಮಣ್ಣ ಟಿ. ನಾಯ್ಕ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಿದ್ದಾಪುರ ಉತ್ಸವ ಸಮಿತಿ ಅಧ್ಯಕ್ಷ ಕೆ.ಜಿ. ನಾಯ್ಕ ಹಣಜೀಬೈಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹಾಗೂ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಭಾಗವಹಿಸಲಿದ್ದಾರೆ. ರಾತ್ರಿ 9 ರಿಂದ ಚಲನಚಿತ್ರ ಹಾಗೂ ಧಾರವಾಹಿ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಇರಲಿದೆ.
ಫೆ. 9 ರಂದು ಸಂಜೆ 6 ರಿಂದ 7.30 ರಿಂದ ಸ್ಥಳೀಯ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಹಾಗೂ ರಾತ್ರಿ 7.30 ರಿಂದ ಸಮಾರೋಪ ಸಮಾರಂಭ, ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಭೀಮಣ್ಣ ಟಿ. ನಾಯ್ಕ, ಮಾಜಿ ಸಚಿವ ಹರತಾಳು ಹಾಲಪ್ಪ ಭಾಗವಹಿಸಲಿದ್ದಾರೆ. ಸಿದ್ದಾಪುರ ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಉಪೇಂದ್ರ ಪೈ, ಬಾಳೂರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಿದ್ದಾಪುರ ಶ್ರೇಯಸ್ ಹಾಸ್ಪಿಟಲ್, ಡಾ|| ಕೆ. ಶ್ರೀಧರ, ಶಿಕ್ಷಣ ಪ್ರಸಾರಕ ಸಮಿತಿ ಕಾರ್ಯಾಧ್ಯಕ್ಷ ಡಾ|| ಶಶಿಭೂಷಣ ವಿನಾಯಕರಾವ್ ಹೆಗಡೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ 9 ರಿಂದ ಸ.ರಿ.ಗ.ಮ.ಪ. ಎದೆ ತುಂಬಿ ಹಾಡುವೆನು ಖ್ಯಾತಿಯ ಗಾಯಕಿಯರು ಸೇರಿದಂತೆ ಪ್ರಮುಖ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಇರಲಿದೆ ಎಂದು ಅವರು ತಿಳಿಸಿದ್ದಾರೆ.