- ಸಂದೇಶ್ ಎಸ್.ಜೈನ್, ದಾಂಡೇಲಿ
ದಾಂಡೇಲಿ : ಫೆ.28 ರಂದು ಆಲೂರಿನಲ್ಲಿ ನಡೆಯಲಿರುವ ತಾಲೂಕಿನ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಪ್ರಾಚಾರ್ಯ ಹಾಗೂ ಹಿರಿಯ ಪತ್ರಕರ್ತರಾದ ಯು.ಎಸ್.ಪಾಟೀಲ್ ಅವರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯು ಆಯ್ಕೆ ಮಾಡಿದೆ.
ನಗರದ ಬಂಗೂರನಗರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ 37 ವರ್ಷಗಳ ಶೈಕ್ಷಣಿಕ ಸೇವೆಯನ್ನು ಸಲ್ಲಿಸಿರುವ ಯು.ಎಸ್.ಪಾಟೀಲ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ಕ್ರಿಕೆಟ್ ತಂಡದ ಸದಸ್ಯರಾಗಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪಿಯುಸಿ ಇತಿಹಾಸ ಪಠ್ಯಪುಸ್ತಕದ ಪರಿಶೀಲನಾ ಸಮಿತಿಯ ಸದಸ್ಯರಾಗಿ, ರಾಜ್ಯಮಟ್ಟದ ಮೌಲ್ಯಮಾಪಕರಾಗಿ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳಾಗಿ, ಪದವಿ ಪೂರ್ವ ಕಾಲೇಜಿನ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿಯೂ ಅನುಪಮ ಸೇವೆಯನ್ನು ಸಲ್ಲಿಸಿದ್ದಾರೆ. ಯು.ಎಸ್.ಪಾಟೀಲ್ ಕಳೆದ 30 ವರ್ಷಗಳಿಂದ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ದಾಂಡೇಲಿಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ, ಸಂಘದ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿರುವ ಯು.ಎಸ್. ಪಾಟೀಲ್ ಅವರು ಪ್ರಸಕ್ತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಸಾಕ್ಷರತಾ ಆಂದೋಲನದಲ್ಲಿ ಸಮನ್ವಯಾಧಿಕಾರಿಯಾಗಿ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ.
ಜಗಜ್ಯೋತಿ ಶ್ರೀ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಕರ್ನಾಟಕ ಸಂಘದಲ್ಲಿಯೂ ಅನೇಕ ವರ್ಷಗಳಿಂದ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಯುಎಸ್. ಪಾಟೀಲ್ ಅವರು ಹಾಲಿ ಅಧ್ಯಕ್ಷರಾಗಿರುತ್ತಾರೆ.
ಕಳೆದ ಅನೇಕ ವರ್ಷಗಳಿಂದ ಲಯನ್ಸ್ ಕ್ಲಬ್ ನಲ್ಲಿ ಗುರುತಿಸಿಕೊಂಡಿರುವ ಯು.ಎಸ್.ಪಾಟೀಲ್ ಅವರು ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿಯೂ, ಜಿಲ್ಲಾ ಚೇರ್ಮೆನ್ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ. ದಾಂಡೇಲಿಯ ಲಯನ್ಸ್ ಅಂತರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಪಟೇಲ್ ನಗರದ ಬಾಬಾ ಹಜರತ್ ಅಲಿ ದರ್ಗಾದ ಅಧ್ಯಕ್ಷರಾಗಿ ಸರ್ವಧರ್ಮ ಸಮನ್ವಯತೆಯನ್ನು ಸಾರುತ್ತಿದ್ದಾರೆ.
ದಾಂಡೇಲಿಯ ವಿವಿಧ ಸಂಘ ಸಂಸ್ಥೆಗಳಲ್ಲಿ ಹಾಗೂ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡಿರುವ ಯು.ಎಸ್.ಪಾಟೀಲ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕವು ಅರ್ಹವಾಗಿ ಅಕ್ಷರ ಜಾತ್ರೆಯ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ನಿಜವಾದ ಗೌರವವನ್ನು ಸಲ್ಲಿಸಿದೆ.