ಕಾರವಾರ: ಜಿಲ್ಲೆಯಲ್ಲಿ ಹಬ್ಬಗಳ ಸಂದರ್ಭದಲ್ಲಿ ತಲೆದೋರುವ ಅನಧಿಕೃತ ಲಾಟರಿ ಹಾವಳಿಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.
ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣದ ಜಿಲ್ಲಾ ಮಟ್ಟದ ಪ್ಲೈಯಿಂಗ್ ಸ್ಕ್ವಾಡ್ನ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಹಬ್ಬಗಳು ಮತ್ತು ಸ್ಥಳೀಯ ಉತ್ಸವಗಳು ನಡೆಯುವ ಸಂದರ್ಭದಲ್ಲಿ ಲಾಟರಿ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಸಾಧ್ಯತೆಗಳಿದ್ದು ಈ ಬಗ್ಗೆ ಎಚ್ಚರವಹಿಸುವಂತೆ ಮತ್ತು ಯಾವುದೇ ರೀತಿಯ ಅನಧಿಕೃತ ಲಾಟರಿಯನ್ನು ಹಾಗೂ ಮಟ್ಕಾ ಹಾವಳಿಯನ್ನು ನಿಯಂತ್ರಿಸುವಂತೆ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಇತರೇ ರಾಜ್ಯಗಳ ಅನಧಿಕೃತ ಲಾಟರಿಗಳು ಮಾರಾಟವಾಗದ ಕುರಿತಂತೆ ನಿರಂತರವಾಗಿ ತಪಾಸಣೆ ನಡೆಸುವಂತೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಜಿಲ್ಲೆಯಲ್ಲಿ 93 ಮಟ್ಕಾ ಪ್ರಕರಣಗಳು ಕಂಡು ಬಂದಿದ್ದು, 105 ಆರೋಪಿಗಳನ್ನು ಬಂಧಿಸಲಾಗಿದೆ. ಅನಧಿಕೃತ ಹಾಗೂ ನಕಲಿ ಲಾಟರಿ ಮಾರಾಟ ಕುರಿತಂತೆ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕ ಗಣೇಶ ಜಿ ಪಟಗಾರ , ವಾಣಿಜ್ಯ ತೆರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು