ಕಾರವಾರ: ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲಾ ಅನಧಿಕೃತ ಆಸ್ತಿಗಳಿಗೆ ಇ-ಖಾತಾ ನೀಡುವ ಕಾರ್ಯವನ್ನು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಭಿಯಾನದ ಮಾದರಿಯಲ್ಲಿ ಕೈಗೊಂಡು 3 ತಿಂಗಳ ಒಳಗೆ ಈ ಕಾರ್ಯವನ್ನು ಮುಕ್ತಾಯಗೊಳಿಸುವಂತೆ ಹಾಗೂ ಅರ್ಜಿ ಸಲ್ಲಿಸಿದ 7 ದಿನಗಳ ಒಳಗೆ ಜಾಗದ ಮಾಲೀಕರಿಗೆ ಇ-ಖಾತಾ ನೀಡುವಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.
ಅವರು ಮಂಗಳವಾರ, ರಾಜ್ಯದಲ್ಲಿ ಅನಧಿಕೃತ ಆಸ್ತಿಗಳಿಗೆ ಇ-ಖಾತಾ ನೀಡುವ ಕುರಿತು ನಡೆದ ಮುಖ್ಯಮಂತ್ರಿಗಳ ವೀಡಿಯೋ ಕಾನ್ಪರೆನ್ಸ್ ಸಭೆಯ ನಂತರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿರುವ ಎಲ್ಲಾ ಅನಧಿಕೃತ ಆಸ್ತಿಗಳಿಗೆ ಸಹ ಇ-ಖಾತಾ ನೀಡಲು ಸರ್ಕಾರವು ಕಾಯ್ದೆ ಮತ್ತು ನಿಯಮಾವಳಿಗಳಿಗೆ ತಿದ್ದುಪಡಿ ತಂದಿದ್ದು, ಅನಧಿಕೃತ ಆಸ್ತಿಗಳ ಸ್ವತ್ತಿನ ಮಾಲೀಕರಿಂದ ಅಗತ್ಯ ದಾಖಲೆಗಳನ್ನು ಸ್ವೀಕರಿಸಿ ಸಕಾಲ ತಂತ್ರಾಂಶದ ಮೂಲಕ 7 ದಿನದ ಒಳಗಾಗಿ ಇ-ಖಾತಾ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಕಾರ್ಯಕ್ಕಾಗಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೆಲ್ಪ್ ಡೆಸ್ಕ್ ತೆರೆದು ಸಾರ್ವಜನಿರಿಗೆ ಅಗತ್ಯ ಮಾಹಿತಿ ನೀಡುವಂತೆ ಮತ್ತು ವ್ಯಾಪಕ ಅರಿವು ಹಾಗೂ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಜಿಲ್ಲೆಯ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಆಸ್ತಿಗಳನ್ನು ಗುರುತಿಸುವ ಕಾರ್ಯವನ್ನು 2 ದಿನಗಳ ಒಳಗೆ ಮಾಡಬೇಕು. ಇದಕ್ಕಾಗಿ ಹೆಸ್ಕಾಂ ಮತ್ತು ಕಂದಾಯ ಇಲಾಖೆಯಲ್ಲಿರುವ ದತ್ತಾಂಶಗಳ ಮಾಹಿತಿಯನ್ನು ಪಡೆದು ಪರಿಶೀಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಇ-ಖಾತಾ ನೀಡುವ ಕಾರ್ಯದಲ್ಲಿ ಯಾವುದೇ ಹಂತದಲ್ಲೂ ಮಧ್ಯವರ್ತಿಗಳ ಹಾವಳಿ ಕಂಡು ಬರದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇ –ಖಾತಾ ನೀಡುವ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅನಧಿಕೃತ ಆಸ್ತಿಗಳು ಇಲ್ಲವೆಂದು ದೃಢೀಕರಣ ನೀಡಬೇಕು. ಇದರ ನಂತರವೂ ಅನಧಿಕೃತ ಬಡಾವಣೆಗಳು ಕಂಡು ಬಂದಲ್ಲಿ ಸಂಬAಧಪಟ್ಟ ಎಲ್ಲಾ ಅಧಿಕಾರಿಗಳು ಜವಾಬ್ದಾರರಾಗಲಿದ್ದು, ಅಂತಹ ಅಧಿಕಾರಿಗಳ ವಿರುದ್ದ ನಾಗರೀಕಾ ಸೇವಾ ನಿಯಮಗಳನ್ವಯ ಶಿಸ್ತು ಕ್ರಮ ಮಾತ್ರವಲ್ಲದೇ ದಂಡ ಮತ್ತು ಸೆರೆವಾಸದ ಶಿಕ್ಷೆಯನ್ನೂ ಕೂಡಾ ವಿಧಿಸಬಹುದಾಗಿದ್ದು, ಎಲ್ಲಾ ಅಧಿಕಾರಿಗಳು ಈ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.