ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಯಶಸ್ವಿ
ದಾಂಡೇಲಿ : ಇಂದು ಒತ್ತಡದ ಬದುಕಿನಲ್ಲಿ ಆರೋಗ್ಯದ ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸುತ್ತಿಲ್ಲ. ಹಾಗಾಗಿ ಆರೋಗ್ಯ ಹದಗೆಡುವಂತಹ ಸ್ಥಿತಿ ನಿರ್ಮಾಣವಾಗಿದೆ. ನಾವೆಲ್ಲರೂ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆಯನ್ನು ನೀಡಬೇಕೆಂದು ನಗರದ ಹಿರಿಯ ವೈದ್ಯರಾದ ಡಾ.ಮೋಹನ ಪಾಟೀಲ್ ಹೇಳಿದರು.
ಅವರು ರೋಟರಿ ಕ್ಲಬ್, ಸಾರ್ವಜನಿಕ ಆಸ್ಪತ್ರೆ ಮತ್ತು ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಡಿ ಶುಕ್ರವಾರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಕ್ಯಾನ್ಸರ್ನ ರೋಗ ರಕ್ಷಣಗಳು ಕಂಡುಬಂದಲ್ಲಿ ಆತಂಕಪಡುವ ಅವಶ್ಯಕತೆ ಇಲ್ಲ. ಸ್ಥಳೀಯ ವೈದ್ಯರ ಸಲಹೆಯನ್ನು ಪಡೆದುಕೊಳ್ಳಬೇಕು. ಬಿಪಿಎಲ್ ಅಂತ್ಯೋದಯ ಹಾಗೂ ಇನ್ನಿತರ ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಉಚಿತ ಇಲ್ಲವೇ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯಗಳಿದೆ. ಕ್ಯಾನ್ಸರ್ ಆರಂಭದ ಹಂತದಲ್ಲೆ ಚಿಕಿತ್ಸೆ ಪಡೆದುಕೊಂಡಲ್ಲಿ ಸಂಪೂರ್ಣ ಗುಣಮುಖರಾಗಲು ಸಾಧ್ಯ ಎಂದರು.
ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ರಾಹುಲ್ ಬಾವಾಜಿ ಸಾರ್ವಜನಿಕರ ಅನುಕೂಲಕ್ಕಾಗಿ ಈ ಶಿಬಿರವನ್ನು ಆಯೋಜಿಸಲಾಗಿದ್ದು, ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ.ಆದಿತ್ಯನಂದನ್ ಕ್ಯಾನ್ಸರ್ ರೋಗ ಲಕ್ಷಣಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಶಿಬಿರದಲ್ಲಿ ಚಿಕಿತ್ಸೆಗಾಗಿ ಆಯ್ಕೆಯಾದವರನ್ನು ಚಿಕಿತ್ಸೆಗೆ ಕಳುಹಿಸುವ ಮುನ್ನ ನಗರದ ವೈದ್ಯರು ಪರೀಕ್ಷಿಸಿದ ನಂತರವೇ ಕಳುಹಿಸಲಾಗುತ್ತದೆ. ಇಲ್ಲವೇ ಆಯ್ಕೆಯಾದವರು ಸ್ಥಳೀಯ ವೈದ್ಯರಲ್ಲಿ ಪರೀಕ್ಷೆಗೊಳಪಡಿಸುವಂತೆ ಸೂಚನೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ, ರೋಟರಿ ಕ್ಲಬ್ಬಿನ ಪ್ರಧಾನ ಕಾರ್ಯದರ್ಶಿ ಅಶೋತೋಷ್ ಕುಮಾರ್ ರಾಯ್, ಖಜಾಂಚಿ ಲಿಯೋ ಪಿಂಟೋ, ಇವೆಂಟ್ ಚೇರ್ಮನ್ ಡಾ.ಅನೂಪ್ ಮಾಡ್ದೋಳ್ಕರ ಹಾಗೂ ರೋಟರಿ ಕ್ಲಬ್ಬಿನ ಪದಾಧಿಕಾರಿಗಳು ಮತ್ತು ಸದಸ್ಯರು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಡಾ.ದ್ಯಾನದೀಪ ಗಾಂವಕರ ನಿರೂಪಿಸಿದರು.