ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತವು, ಯುನಿಸೆಫ್ ಸಂಸ್ಥೆಯ ಸಹಭಾಗಿತ್ವದೊಂದಿಗೆ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿಯೂ ಗ್ರಾಮ ಪಂಚಾಯಿತಿ ಮಟ್ಟದ ಸಮಗ್ರ ವಿಪತ್ತು ನಿರ್ವಹಣಾ ಯೋಜನೆಗಳನ್ನು ರೂಪಿಸುವ ಗುರಿಯನ್ನು ಹೊಂದಿದ್ದು. ಈ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ, ಗ್ರಾಮ ಪಂಚಾಯಿತಿಗಳನ್ನು ವಿಪತ್ತು ನಿರ್ವಹಣೆಗೆ ಸನ್ನದ್ಧಗೊಳಿಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ.
ಇದರ ಅಂಗವಾಗಿ, ಗುರುವಾರ ಹೊನ್ನಾವರ ಮತ್ತು ಕುಮಟಾ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರಮುಖ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಆಯಾ ತಾಲೂಕುಗಳ ತಹಶೀಲ್ದಾರರು, ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಕುಮಟಾ ತಾಲ್ಲೂಕಿನ 22 ಗ್ರಾಮ ಪಂಚಾಯಿತಿಳ ಹಾಗೂ ಹೊನ್ನಾವರ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಆಡಳಿತದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದರು.
ಯುನಿಸೆಫ್ ಹೈದರಾಬಾದ್ ಕ್ಷೇತ್ರ ಕಚೇರಿಯ ವಿಪತ್ತು ನಿರ್ವಹಣಾ ತಜ್ಞ ಡಾ. ಪ್ರಭಾತ್ ಮಟ್ಪಡಿ ಅವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿಪತ್ತು ನಿರ್ವಹಣೆಯ ವಿವಿಧ ಆಯಾಮಗಳ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು. ಅವರು ಅಪಾಯಗಳ ಸ್ವರೂಪ ದುರ್ಬಲತೆಗಳ ವಿಶ್ಲೇಷಣೆ ಮತ್ತು ಪರಿಣಾಮಕಾರಿ ವಿಪತ್ತು ನಿರ್ವಹಣಾ ತಂತ್ರಗಳ ಕುರಿತು ವಿಸ್ತೃತವಾಗಿ ವಿವರಿಸಿದರು. ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಯೋಜನೆಯನ್ನು ಕ್ರಮಬದ್ಧವಾಗಿ ಸಿದ್ಧಪಡಿಸುವ ವಿಧಾನವನ್ನು ಪ್ರಾತ್ಯಕ್ಷಿಕೆಗಳ ಮೂಲಕ ತಿಳಿಸಿಕೊಟ್ಟರು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಸ್ತೃತವಾದ ಮತ್ತು ಕಾರ್ಯಸಾಧ್ಯವಾದ ವಿಪತ್ತು ನಿರ್ವಹಣಾ ಯೋಜನೆಯನ್ನು ರೂಪಿಸುವಾಗ, ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಬAಧಪಟ್ಟ ಎಲ್ಲಾ ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಮಗ್ರ ಯೋಜನೆಯನ್ನು ತಯಾರಿಸಬೇಕೆಂದು ತಿಳಿಸಿದರು.
ಜಿಲ್ಲಾಡಳಿತವು ಈ ಉಪಯುಕ್ತ ತರಬೇತಿ ಕಾರ್ಯಾಗಾರಗಳನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ವಿಸ್ತರಿಸಲು ಬದ್ಧವಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸನ್ನದ್ಧತೆಯನ್ನು ಹೆಚ್ಚಿಸುವುದು ಜಿಲ್ಲಾಡಳಿತದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ, ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ಈ ತರಬೇತಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತವಾದ ವಿಪತ್ತು ನಿರ್ವಹಣಾ ಯೋಜನೆಯನ್ನು ರೂಪಿಸುವಲ್ಲಿ ಸಹಕರಿಸುವಂತೆ ಕೆ.ಲಕ್ಷ್ಮಿಪ್ರಿಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಉತ್ತರ ಕನ್ನಡ ಜಿಲ್ಲೆ, ಕಾರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.