Slide
Slide
Slide
previous arrow
next arrow

ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಮುಂಗಾರು ಪೂರ್ವ ತಯಾರಿ ಸಭೆ

300x250 AD

ಹಳಿಯಾಳ : ಸ್ವಚ್ಚತೆಯ ಬಗ್ಗೆ ಎಷ್ಟೆಲ್ಲಾ ಜಾಗೃತಿ ಮೂಡಿಸಿದರೂ ರಸ್ತೆ ಬದಿಯಲ್ಲೆ ಪುರುಷರು ಮೂತ್ರ ವಿಸರ್ಜನೆ ಮಾಡುತ್ತಾರೆ. ಸ್ವಚ್ಛತೆಯ ಬಗ್ಗೆ ಒಂದಿಂಚು ಕಾಳಜಿ ಇಲ್ಲದಿರುವುದು ಬಹಳ ನೋವು ತಂದಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಅವರು ಗುರುವಾರ ನಡೆದ ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರದ ಮುಂಗಾರು ಪೂರ್ವ ತಯಾರಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವವರ ಮೇಲೆ ಪ್ರಕರಣ ದಾಖಲಿಸಬೇಕೆಂದು ಸಭೆಯಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು. ಹಳಿಯಾಳ ಪಟ್ಟಣದಲ್ಲಿ ಇರುವ ಖಾಲಿ ನಿವೇಶನಗಳಲ್ಲಿ ಗಿಡಗಂಟಿಗಳು ಬೆಳೆದು ನಿಂತಿದ್ದು, ಅದನ್ನು ವಿಲೇವಾರಿ ಮಾಡಲು ಆ ನಿವೇಶನಗಳ ಮಾಲಕರಿಗೆ ನೋಟಿಸ್ ನೀಡಬೇಕು. ಒಂದು ವೇಳೆ ವಿಲೇವಾರಿ ಮಾಡದಿದ್ದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಪುರಸಭೆಯ ಮುಖ್ಯಾಧಿಕಾರಿಯವರಿಗೆ ಸೂಚನೆಯನ್ನು ನೀಡಿದರು. ದಾಂಡೇಲಿ ನಗರದಲ್ಲಿರುವ ವಿವಿಧ ಉದ್ಯಾನವನಗಳನ್ನು ರೆಸಾರ್ಟ್ ಮತ್ತು ಹೋಂಸ್ಟೇಯವರಿಗೆ ನಿರ್ವಹಣೆ ಮಾಡಲು ಜವಾಬ್ದಾರಿಯನ್ನು ನೀಡಬೇಕೆಂದು ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದರು. ದಾಂಡೇಲಿ ನಗರ ಪ್ರದೇಶದಲ್ಲಿ ಸ್ವಚ್ಛತೆಗೆ ಬೇಕಾದ ಅಗತ್ಯ ಪರಿಕರಗಳನ್ನು ಹೋಂ ಸ್ಟೇ ಮತ್ತು ರೆಸಾರ್ಟ್ ನವರ ಮೂಲಕ ಪಡೆದುಕೊಳ್ಳುವಂತೆ ಸೂಚಿಸಿದರು. ಹಳಿಯಾಳ ಪಟ್ಟಣಕ್ಕೆ 10 ಮತ್ತು ದಾಂಡೇಲಿ ನಗರಕ್ಕೆ 10 ಹುಲ್ಲು ಕಟಾವು ಮಾಡುವ ಯಂತ್ರಗಳನ್ನು ಹಳಿಯಾಳಕ್ಕೆ ಪ್ಯಾರಿ ಇಐಡಿ ಸಕ್ಕರೆ ಕಾರ್ಖಾನೆಯಿಂದ ಹಾಗೂ ದಾಂಡೇಲಿಗೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯಿಂದ ಪಡೆದುಕೊಳ್ಳಬೇಕೆಂದು ಸೂಚನೆ ನೀಡಿದರು. ಸೂಕ್ತ ರೀತಿಯಲ್ಲಿ ಪರೀಕ್ಷಿಸಿದ ನಂತರವೇ ಕುಡಿಯುವ ನೀರು ಪೂರೈಕೆ ಮಾಡಬೇಕು. ಮುಂಗಾರು ಮಳೆ ಪ್ರಾರಂಭವಾಗುತ್ತಿರುವುದರಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕೆಂದು ಖಡಕ್ ಎಚ್ಚರಿಕೆಯನ್ನು ನೀಡಿದರು. ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನಲ್ಲಿರುವ ಎಲ್ಲ ಇಲಾಖೆಗಳ ಕಚೇರಿಗಳ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಜೂನ್ ನಾಲ್ಕರಂದು ದಿಢೀರ್ ಭೇಟಿ ಮಾಡಿದಾಗ ಅಸ್ವಚತೆ ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮುಂಗಾರು ಮಳೆಯ ಸಂದರ್ಭದಲ್ಲಿ ಆಗಬಹುದಾದ ಅವಘಡಗಳನ್ನು ಹಾಗೂ ನೆರೆಹಾವಳಿಯನ್ನು ಸಮರ್ಪಕವಾಗಿ ಎದುರಿಸಲು ಎಲ್ಲ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ರಾಜ್ಯದಲ್ಲಿ ಕೊರೊನಾ ಮತ್ತೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಎಲ್ಲರೂ ಪಾಲಿಸುವ ನಿಟ್ಟಿನಲ್ಲಿ ಜನ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡಬೇಕು ಎಂದರು.

300x250 AD

ವೇದಿಕೆಯಲ್ಲಿ ಪುರಸಭೆಯ ಅಧ್ಯಕ್ಷೆ ದ್ರೌಪದಿ ಅಗಸರ, ತಾ.ಪಂ ಆಡಳಿತಾಧಿಕಾರಿ ಉಪಸ್ಥಿತರಿದ್ದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ತಹಶೀಲ್ದಾರರು, ತಾ.ಪಂ‌ ಕಾರ್ಯ ನಿರ್ವಹಣಾಧಿಕಾರಿಗಳು, ಪುರಸಭೆಯ ಮುಖ್ಯಾಧಿಕಾರಿ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಇನ್ನಿತರ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top