ಹಳಿಯಾಳ : ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಶಾಸಕ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ನಡೆದ ಆಶ್ರಯ ಸಮಿತಿ ಸಭೆಯು ಗುರುವಾರ ಸಂಪನ್ನಗೊಂಡಿತು.
ಸಭೆಯಲ್ಲಿ ವಸತಿ ಯೋಜನೆಗಳ ಅನುಷ್ಠಾನ, ಬಡಾವಣೆಗಳ ಮೂಲಸೌಕರ್ಯಗಳ ಕುರಿತಂತೆ ವಸತಿ ಇಲಾಖೆ ಅಧಿಕಾರಿಗಳೊಂದಿಗೆ ಆರ್.ವಿ.ದೇಶಪಾಂಡೆ ಚರ್ಚೆ ನಡೆಸಿದರು. ವಿಶೇಷವಾಗಿ ಪಟ್ಟಣ ಹಾಗೂ ಆಶ್ರಯ ಬಡಾವಣೆಗಳಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ಅಭಾವ, ಚರಂಡಿ ಸ್ವಚ್ಛತೆ, ರಸ್ತೆ ಸುಧಾರಣೆ ಹಾಗೂ ಇತರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಪುರಸಭೆಯ ಪೌರ ಕಾರ್ಮಿಕರಿಗೆ ಮಳೆಗಾಲದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗಲೆಂದು ರೆನ್ ಕೋಟ್ ಗಳನ್ನು ವಿತರಿಸಲಾಯಿತು.
ಸಭೆಯಲ್ಲಿ ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ಸಹಾಯಕ ಆಯುಕ್ತರಾದ ಕನಿಷ್ಕ ಶರ್ಮಾ, ತಹಸೀಲ್ದಾರ್ ಪ್ರವೀಣ್ ಹುಚ್ಚಣ್ಣನವರ, ಪುರಸಭೆಯ ಮುಖ್ಯಾಧಿಕಾರಿ ಅಶೋಕ ಸಾಳೆನ್ನವರ, ಆಶ್ರಯ ಸಮಿತಿ ಸದಸ್ಯರು ಮತ್ತು ವಸತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.