Slide
Slide
Slide
previous arrow
next arrow

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜನರ ಸುರಕ್ಷತೆ ಬಗ್ಗೆ ಸಂಸದ ಕಾಗೇರಿ ಗಮನ ನೀಡಲಿ: ದೀಪಕ್ ದೊಡ್ಡೂರು

300x250 AD

ಶಿರಸಿ: ಕಳೆದ ಮಳೆಗಾಲದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ದುರಂತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಆ ದುರ್ಘಟನೆಯ ಮಾಸುವ ಮುನ್ನವೇ ಇದೀಗ ಮತ್ತೆ ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದ ಅನೇಕ ಘಟನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಕೂಡಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಗುಡ್ಡ ಕುಸಿಯುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಸಂಬಂಧಿತ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ ಮುನ್ನಚ್ಚರಿಕೆ ವಹಿಸಬೇಕು. ಮತ್ತು ಆ ನಿಟ್ಟಿನಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನರಿಗೆ ಅಭಯವನ್ನು ನೀಡಬೇಕು ಎಂದು ಕೆಪಿಸಿಸಿ ಸದಸ್ಯ, ಕಾಂಗ್ರೆಸ್ ಯುವ ಮುಖಂಡ ದೀಪಕ್ ದೊಡ್ಡೂರು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಳೆಗಾಲ ಆರಂಭವಾಗಿದ್ದು, ಮಲೆನಾಡಿನ ಪ್ರದೇಶದಲ್ಲಿ ಕಳೆದ ಐದಾರು ವರ್ಷಗಳಲ್ಲಿ ಗುಡ್ಡ ಕುಸಿತ ಸರ್ವೇಸಾಮಾನ್ಯವಾಗಿದೆ. ಅದರಲ್ಲಿಯೂ ನಮ್ಮ ಜಿಲ್ಲೆಯಲ್ಲಿ ಐಆರ್‌ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿ ಪರಿಣಾಮ, ರಾಷ್ಟ್ರೀಯ ಹೆದ್ದಾರಿ ಮೇಲೆ, ಅದಕ್ಕೆ ಸಂಬಂಧಿಸಿ ಗುಡ್ಡಗಳ ಕುಸಿತ ನಿರಂತರವಾಗಿ ನಡೆಯುತ್ತಿದೆ. ಐಆರ್ಬಿಯವರ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಗುಡ್ಡ ಕುಸಿದು ಜನರ ಜೀವ ಹೋದ ಮೇಲೆ ಕೊಡುವ ಸರಕಾರದ ಪರಿಹಾರದ ಧನ ತರಿಸಿ ಕೊಡುವುದರ ಬದಲು, ಈಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜನರ ಜೀವಕ್ಕೆ ಗ್ಯಾರಂಟಿ ಕೊಡುವ ಕೆಲಸವನ್ನು ಮಾನ್ಯ ಸಂಸದರು ಮಾಡುವಂತಾಗಬೇಕು. ಜೊತೆಗೆ ಶಿರಸಿ ಕುಮಟಾ ರಸ್ತೆಯಲ್ಲಿಯೂ ಸಹ ಗುಡ್ಡ ಕುಸಿತ ನಡೆಯುತ್ತಿರುವುದು ಆಘಾತಕಾರಿ ಸಂಗತಿ. ಈ ಎಲ್ಲ ಹಿನ್ನೆಲೆಯಲ್ಲಿ ಜನರಿಗೆ ತೊಂದರೆಯಾಗದಂತೆ ತುರ್ತು ಕ್ರಮಕ್ಕೆ ರಾಜ್ಯ ಸರಕಾರದೊಂದಿಗೆ ಕೇಂದ್ರ ಸರಕಾರದ ಅಧಿಕಾರಿಗಳೂ ಕೈಜೋಡಿಸಬೇಕಿದೆ.

300x250 AD

ಉತ್ತರ ಕನ್ನಡದಲ್ಲಿ ಕರಾವಳಿಯ ಮತ್ತು ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕಿನ ಹಲವು ಇಳಿಜಾರಾದ ಪ್ರದೇಶಗಳಲ್ಲಿ ಭೂಕುಸಿತದ ಸಾಧ್ಯತೆಗಳಿರುವುದನ್ನು ಜಿಯೊಲಾಜಿಕಲ್‌ ಸರ್ವೇ ಆಫ್ ಇಂಡಿಯಾ ಈಗಾಗಲೇ ಗುರುತಿಸಿದೆ. ಆ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಈ ಕೂಡಲೇ ಕೈಗೊಳ್ಳಬೇಕು. ಭೂಕುಸಿತದ ಸಾಧ್ಯತೆಗಳಿರುವ ಹೆದ್ದಾರಿ ಹಾಗೂ ರಸ್ತೆಗಳಲ್ಲಿ ಸುಗಮವಾಗಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಸರಿಯಾದ ಪೂರ್ವಯೋಜಿತ ಕ್ರಮ ಕೈಗೊಂಡು ಸೂಕ್ತ ವ್ಯವಸ್ಥೆ ಮಾಡಬೇಕು. ಕಳೆದ ಐದಾರು ವರ್ಷಗಳಿಂದ ಭೂಕುಸಿತವಾಗಿ ಮನೆ ಹಾಗೂ ಕೃಷಿ ಭೂಮಿಯನ್ನು ಕಳೆದುಕೊಂಡ ಕುಟುಂಬಗಳಿಗೆ ಪುನರ್ವಸತಿ ಹಾಗೂ ಪರಿಹಾರ ಇನ್ನೂ ಸೂಕ್ತವಾಗಿ ತಲುಪಿಲ್ಲ. ಶಿರಸಿ ತಾಲೂಕಿನ ಜಾಜಿಗುಡ್ಡೆ, ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದಲ್ಲಿನ ಪುನರ್ವಸತಿ ಕೆಲಸಗಳು ಸರಿಯಾಗಿ ನಡೆಯಬೇಕು. ಈ ಕುರಿತು ರಾಜ್ಯ ಸರಕಾರಕ್ಕೆ ಕೇಂದ್ರ ಸರಕಾರವು ಕೈಜೋಡಿಸಬೇಕು. ಹೆದ್ದಾರಿಯಂಚಿನಲ್ಲಿ ಗುಡ್ಡಗಳನ್ನು ಕಡಿಯುವಾಗ ಕೈಗೊಳ್ಳಬೇಕಾದ ಸುರಕ್ಷಿತ ಕ್ರಮಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಗುತ್ತಿಗೆದಾರರಿಗೆ ಕೇಂದ್ರ ಸರ್ಕಾರ ಸ್ಪಷ್ಟ ಆದೇಶ ನೀಡಬೇಕು. ಒಟ್ಟಾರೆಯಾಗಿ ಮಳೆಗಾಲದ ಈ ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳನ್ನು ಎದುರಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿನ ತೊಂದರೆಗಳನ್ನು ನಿವಾರಿಸಲು ಸಂಸದ ಕಾಗೇರಿಯವರು ಈ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

Share This
300x250 AD
300x250 AD
300x250 AD
Back to top