ದಾಂಡೇಲಿ : ಬದಲಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಯುವ ಜನರೇ ಮಾದಕ ವ್ಯಸನದ ಅಮಲಿನಲ್ಲಿ ತೇಲುತ್ತಿರುವುದು ಆತಂಕಕಾರಿಯಾದ ಬೆಳವಣಿಗೆಯಾಗಿದೆ. ಡ್ರಗ್ಸ್ ಇತ್ಯಾದಿ ಮಾದಕ ವಸ್ತುಗಳಿಂದ ಅನೇಕ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಜೊತೆಗೆ ಈ ವ್ಯಸನವು ಅವರ ದೈಹಿಕ ಆರೋಗ್ಯವನ್ನು ಮಾತ್ರವಲ್ಲದೆ ಮಾನಸಿಕ ಆರೋಗ್ಯವನ್ನೂ ಹದಗೆಡಿಸುತ್ತಿದೆ. ಇದರ ಗಂಭೀರತೆಯನ್ನು ಗಣನೆಗೆ ತೆಗೆದುಕೊಂಡು ಮಾದಕವಸ್ತು ಮುಕ್ತ ಜಗತ್ತನ್ನು ನಿರ್ಮಿಸಬೇಕು, ಮಾದಕ ವಸ್ತುಗಳ ಕಳ್ಳಸಾಗಾಣಿಕೆಯನ್ನು ತಡೆಯಬೇಕು, ಇದರ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದು, ಮಾದಕ ವಸ್ತುಗಳ ಬಗ್ಗೆ ಯುವ ಜನತೆ ಜಾಗೃತರಾಗಿ ಇರಬೇಕೆಂದು ನಗರದ ಹಿರಿಯ ವೈದ್ಯ ಡಾ.ಮೋಹನ ಪಾಟೀಲ್ ಕರೆ ನೀಡಿದರು.
ಅವರು ಪೊಲೀಸ್ ಇಲಾಖೆಯ ಆಶ್ರಯದಡಿ ಅಂಬೇವಾಡಿಯ ಜಿಟಿಟಿಸಿ ಕಾಲೇಜಿನಲ್ಲಿ ಜಿಟಿಟಿಸಿ ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಪೊಲೀಸ್ ಇಲಾಖೆ ನಿರಂತರವಾಗಿ ಜನ ಜಾಗೃತಿಯನ್ನು ಮೂಡಿಸುವ ಕಾರ್ಯ ಮಾಡುತ್ತಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಆದರ್ಶ ನಡವಳಿಕೆಗಳನ್ನು ಮೈಗೂಡಿಸಿಕೊಂಡು ಭವಿಷ್ಯದ ಉನ್ನತಿಯ ಬಗ್ಗೆ ಗುರಿಯನ್ನು ಇಟ್ಟು ಸತತ ಅಧ್ಯಯನಶೀಲರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಿವೈಎಸ್ಪಿ ಶಿವಾನಂದ ಮದರಕಂಡಿ ಅವರು ಕ್ಷಣಿಕ ಸುಖಕ್ಕಾಗಿ ಮಾದಕ ವ್ಯಸನಗಳಿಗೆ ದಾಸರಾಗಿ ಶಾಶ್ವತ ನೆಮ್ಮದಿಯ, ಸಂತೃಪ್ತಿಯ ಜೀವನದಿಂದ ಯಾರು ವಂಚಿತರಾಗಬಾರದು. ಈ ನಿಟ್ಟಿನಲ್ಲಿ ನಾವು ನಮ್ಮ ಜೀವನದಲ್ಲಿ ಸನ್ನಡತೆಗಳನ್ನು ಅಳವಡಿಸಿಕೊಂಡು ಸನ್ಮಾರ್ಗದೆಡೆಗೆ ಸಾಗಬೇಕಾದರೆ ಮಾದಕ ವ್ಯಸನಗಳಿಂದ ದೂರವಿರಬೇಕೆಂದು ವಿದ್ಯಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಪಿಎಸ್ಐ ಕಿರಣ್ ಪಾಟೀಲ್, ರೋಟರಿ ಕ್ಲಬ್ ಅಧ್ಯಕ್ಷ ರಾಹುಲ್ ಬಾಬಾಜಿ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಆಗಸ್ಟಿನ್ ಕಾಳೆ, ಜಿಟಿಟಿಸಿ ಕಾಲೇಜಿನ ಅಧಿಕಾರಿ ವಾಸುದೇವ ಮಿರಾಶಿ ಉಪಸ್ಥಿತರಿದ್ದು ಸಂದರ್ಭಚಿತವಾಗಿ ಮಾತನಾಡಿದರು. ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ನಿಮಿತ್ತವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಜಿಟಿಸಿ ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.