ಶಿವಮೊಗ್ಗ: ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಔಷಧಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಅಡಿಕೆಗೆ ಬರುವ ಎಲೆಚುಕ್ಕೆ, ಕೊಳೆರೋಗ ನಿಯಂತ್ರಣ ಔಷಧವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿ, ರೈತರನ್ನು ವಂಚಿಸುವ ಸಂಸ್ಥೆಗಳ ಬಗ್ಗೆ ಸರ್ಕಾರಕ್ಕೆ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಔಷಧಗಳ ಮಾರಾಟ ಬೆಲೆ ನಿಗದಿ ಮಾಡುವ ಸಂಬಂಧ ಪರಿಶೀಲನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅವರು ಹೇಳಿದ್ದಾರೆ. ಅವ್ಯಾಹತವಾಗಿ ಬೀಳುತ್ತಿರುವ ಮಳೆಯಿಂದಾಗಿ ಸಕಾಲದಲ್ಲಿ ಈ ರೋಗದ ನಿಯಂತ್ರಣಕ್ಕೆ ಔಷಧ ಸಿಂಪರಣೆ ಸಾಧ್ಯವಾಗುತ್ತಿಲ್ಲ ಆದ್ದರಿಂದ ರೋಗ ಹತೋಟಿಗೆ ಬರುತ್ತಿಲ್ಲವೆಂದು ತಜ್ಞರು ತಿಳಿಸಿದ್ದಾರೆ. ಮಳೆ ಕಡಿಮೆಯಾಗುತ್ತಿದ್ದಂತೆ ಹಾಗೂ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಬಿಸಿಲು ಬಿದ್ದಲ್ಲಿ ಸಹಜವಾಗಿ ಈ ರೋಗ ನಿಯಂತ್ರಣಕ್ಕೆ ಬರಲಿದೆ” ಎಂದರು.
ಈ ರೋಗದ ನಿಯಂತ್ರಣಕ್ಕೆ ಬೇಕಾಗಿರುವ ಔಷಧ ಹೆಚ್ಚಿನ ಬೆಲೆಯದ್ದಾಗಿದೆ. ಮಾರುಕಟ್ಟೆಯಲ್ಲಿ ಈ ಔಷಧ ಸ್ಪರ್ಧಾತ್ಮಕ ಬೆಲೆಗೆ ದೊರಕುವಂತೆ ಯತ್ನಿಸಲಾಗುವುದು. ಅಲ್ಲದೇ ಔಷಧ ಖರೀದಿಗೆ ಸರ್ಕಾರದಿಂದ ಸಹಾಯಧನ ನೀಡುವ ಆದೇಶ ಹೊರಬೀಳುವ ನಿರೀಕ್ಷೆ ಇದೆ ಎಂದು ಹೇಳಿದರು.
ಹಾಗೆಯೇ ಎಲೆಚುಕ್ಕೆ ರೋಗಕ್ಕೆ ಸಂಬಂಧಿಸಿದಂತೆ ರೈತರಿಗೆ ಸೂಕ್ತ ಮಾಹಿತಿ ನೀಡಲು ಕೃಷಿ ವಿಶ್ವವಿದ್ಯಾಲಯಗಳು, ಅಡಿಕೆ ಸಂಶೋಧನಾ ಕೇಂದ್ರ, ಅಧಿಕಾರಿಗಳಿಗೆ ಸರ್ಕಾರ ಈಗಾಗಲೇ ಸೂಚಿಸಿದೆ. ಎಲೆಚುಕ್ಕೆ ರೋಗ ವ್ಯಾಪಿಸುತ್ತಿರುವ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಯಬೇಕಿದೆ. ತಜ್ಞ ವಿಜ್ಞಾನಿಗಳು ಸೋಂಕು ಬಾದಿತ ಕೃಷಿಕರ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಸಲಹೆ ನೀಡಲಿದ್ದಾರೆ. ಅಲ್ಲದೆ ಮರ ಹತ್ತಿ ಔಷಧ ಸಿಂಪಡಿಸುವ ಬದಲಾಗಿ ಬುಡಕ್ಕೆ ಸಿಂಪಡಿಸುವುದರಿಂದ ರೋಗ ನಿಯಂತ್ರಿಸುವ ವಿಧಾನಗಳ ಬಗ್ಗೆ ಸಂಶೋಧನೆ ನಡೆಸುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.